ಬೆಂಗಳೂರು : ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೆ, ಕೋವಿಡ್ನಿಂದ ಮೃತಪಟ್ಟ ಎಲ್ಲರ ವಾರಸುದಾರರಿಗೂ ೫ ಲಕ್ಷ ರೂಪಾಯಿಗಳನ್ನು ಕಡ್ಡಾಯವಾಗಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್-೧೯ ಎರಡೂ ಅಲೆಗಳಿಂದ ಕನಿಷ್ಠವೆಂದರೂ ೪ ಲಕ್ಷ ಜನ ಮರಣ ಹೊಂದಿದ್ದಾರೆ. ಹಾಗಾಗಿ ಕುಟುಂಬಗಳಲ್ಲಿ ದುಡಿಯುವ ಸದಸ್ಯರುಗಳನ್ನು ಕಳೆದುಕೊಂಡು ಈ ಕುಟುಂಬಗಳು ಅನಾಥವಾಗಿವೆ ಎಂದು ನೊಂದವರಿಗಾಗಿ ದನಿ ಎತ್ತಿದರು.
ಅಸಂಖ್ಯಾತ ಕುಟುಂಬಗಳಲ್ಲಿ ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡ ಮಕ್ಕಳು ದಿಕ್ಕು ತೋಚದೆ ಕೂತಿದ್ದಾರೆ. ದುಡಿವ ಮಕ್ಕಳನ್ನು ಕಳೆದುಕೊಂಡ ವೃದ್ಧ ತಂದೆ ತಾಯಿಗಳು ತಬ್ಬಲಿಗಳಾಗಿದ್ದಾರೆ. ಅಸಹಾಯಕರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ ೫ ಲಕ್ಷ ರೂಪಾಯಿಗಳನ್ನಾದರೂ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಕೇಂದ್ರ ಸರ್ಕಾರ ದಿನಾಂಕ ೧೪-೩-೨೦೨೦ ರಂದು ಕೋವಿಡ್ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ ೪ ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ದಿನ ಮಾರ್ಪಡಿಸಿಕೊಂಡಿದೆ. ಈ ಕ್ರಮ ಸರಿಯಲ್ಲ ಎಂದರು. ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-೧೯ ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ ೫ ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ [ಕೇಂದ್ರ ೪ ಲಕ್ಷ, ರಾಜ್ಯ ಸರ್ಕಾರ-೧ ಲಕ್ಷ]. ಹಾಗಾಗಿ ಕೋವಿಡ್-೧೯ ನಿಂದ ಮರಣ ಹೊಂದಿದವರಿಗೆ ತಲಾ ೫ ಲಕ್ಷ ರೂಪಾಯಿಗಳನ್ನು ಕೊಡಲೇಬೇಕೆಂದು ಒತ್ತಾಯಿಸಿದ್ದೆವು.
ಆದರೆ ದಿನಾಂಕ; ೨೮-೯-೨೦೧ ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-೧೯ ರಿಂದ ಮೃತ ಪಟ್ಟರೆ ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ ೧ ಲಕ್ಷ ರೂಪಾಯಿಗಳನ್ನು, ಕೇಂದ್ರ ಸರ್ಕಾರದಿಂದ ೫೦ ಸಾವಿರ ರೂಪಾಯಿಗಳನ್ನು [ಬಿಪಿಎಲ್ ಅಲ್ಲದ ಕುಟುಂಬಗಳೂ ಸೇರಿದಂತೆ ಯಾರೆ ವ್ಯಕ್ತಿಯು ಕೋವಿಡ್ ನಿಂದ ಮೃತಪಟ್ಟರೆ] ನೀಡುವುದಾಗಿ ಆದೇಶ ಹೊರಡಿಸಲಾಗಿದೆ ಇದರ ವಿರುದ್ಧ ಕೇಂದ್ರ ಹಾಗೂ ರಾಜ್ಯದ ಸಂಸದರು ಎಚ್ಚೆತ್ತುಕೊಂಡು ಒತ್ತಾಯಿಸಬೇಕು ಎಂದಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಕೋವಿಡ್-೧೯ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗುತ್ತಿದೆ ಎಂದು ಸಾತ್ವಿಕ ರೋಷ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಬಿಕ್ಕಟ್ಟು ತುಟ್ಟತುದಿಯಲ್ಲಿದ್ದಾಗ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತಹ ಅರಾಜಕತೆಯನ್ನು ಸೃಷ್ಟಿಸಲಾಯಿತು. ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಈ ನಿಲುವು ಮಾನವೀಯವೆನ್ನಿಸುವುದಿಲ್ಲ ಎಂದಿದ್ದಾರೆ.
ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್- ೧೯ ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ ೫ ಲಕ್ಷ ರೂಪಾಯಿಗಳನ್ನು ನೀಡಬೇಕು. ಪ್ರಕೃತಿ ವಿಕೋಪ ನಿಯಮಗಳಲ್ಲಿ, ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂದಿದೆ. ರಾಜ್ಯ ಸರ್ಕಾರ ಅದನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡು ಇದ್ದವರಿಗೆ ಮಾತ್ರ ಕೇವಲ ೧.೫ ಲಕ್ಷ [ಕೇಂದ್ರ, ರಾಜ್ಯಗಳೆರಡೂ ಸೇರಿ] ರೂಪಾಯಿಗಳನ್ನು ನೀಡಲಾಗುವುದೆಂದು ಹೇಳಲಾಗಿದೆ. ಇದು ಸರಿಯಲ್ಲ ಎಂದು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Discussion about this post