ನವದೆಹಲಿ: ಪ್ರಜಾಪ್ರಭುತ್ವದ ತಾಯಿ ಎನಿಸಿಕೊಂಡಿರುವ ಭಾರತದಿಂದ ಬಂದಿದ್ದೇನೆ. ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಭಾರತದಲ್ಲಿ ಈ ವರ್ಷ ೭೫ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದೇವೆ. ೪ನೇ ಬಾರಿ ವಿಶ್ವ ಸಂಸ್ಥೆಯಲ್ಲಿ ಮಾತನಾಡುತ್ತಿದ್ದೇನೆ. ಏಕಾತ್ಮ ಮಾನವತಾವಾದ ನಮ್ಮ ಮೂಲ ಮಂತ್ರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.
ಇದೇ ವೇಳೆ ಕಳೆದ ಒಂದೂವರೆ ವರ್ಷದಲ್ಲಿ ಇಡೀ ವಿಶ್ವವೇ ಕೊರೊನಾ ಮಹಾಮಾರಿಯಿಂದ ನಲುಗಿ ಹೋಗಿದೆ. ಸೋಂಕಿನಿಂದ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
USA ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಸಂಜೆ ೬:೩೦ರಲ್ಲಿ (ಭಾರತೀಯ ಕಾಲಮಾನ) ವಿಶ್ವಸಂಸ್ಥೆಯ ೭೬ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಭಾರತ ಅಭಿವೃದ್ಧಿಯಾದರೆ ವಿಶ್ವದ ಅಭಿವೃದ್ಧಿಯಾಗುತ್ತದೆ. ಭಾರತ ಸುಧಾರಣೆಯೇ ವಿಶ್ವವೇ ಸುಧಾರಣೆ. ಭಾರತದ ಅಭಿವೃದ್ಧಿಯಿಂದ ವಿಶ್ವದ ಅಭಿವೃದ್ಧಿಗೆ ವೇಗ ಸಿಗುತ್ತದೆ. ಕಲುಷಿತ ನೀರು ಇಡೀ ವಿಶ್ವಕ್ಕೆ ಶಾಪವಾಗಿ ಪರಿಣಮಿಸಿದೆ. ಭಾರತ ಮಾತ್ರವಲ್ಲದೆ ಇಡೀ ಜಗತ್ತನ್ನು ಈ ಸಮಸ್ಯೆ ಕಾಡುತ್ತಿದೆ. ಅದರಲ್ಲೂ ಬಡ ಹಾಗೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಕುಡಿಯಲು ಯೋಗ್ಯವಾದ ನೀರಿನ ಸಮಸ್ಯೆ ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಭಯೋತ್ಪಾದನೆ ರಾಜಕೀಯ ಆಯುಧವಾಗಿ ಬಳಕೆಯಾಗುತ್ತಿದೆ. ಭಯೋತ್ಪಾದಕರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಭಯೋತ್ಪಾದನೆ ಅವರಿಗೇ ಮಾರಕ ಆಗಲಿದೆ. ಆಫ್ಘನ್ ಉಗ್ರರನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಬೇಡಿ. ಆಫ್ಘನ್ ಭೂಮಿ ಉಗ್ರರಿಗೆ ಬಳಕೆಯಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರಿಕೆ ಎಚ್ಚರಿಕೆ ನೀಡಿದರು.
ಕೋವಿಡ್ ನಂತರ ಅಂದರೆ, ಎರಡು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ವಿದೇಶಿ ಪ್ರವಾಸ ಕೈಗೊಡಿದ್ದು, ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದಾರೆ.
ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುವುದು, ಸಮರ್ಥ ಪುನರ್ನಿರ್ಮಾಣ, ಜಗತ್ತಿನ ಅಗತ್ಯಗಳಿಗೆ ಸ್ಪಂದಿಸುವುದು, ಜನರ ಹಕ್ಕುಗಳನ್ನು ಗೌರವಿಸುವುದು ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದರು.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆ ಮಾತುಕತೆ, ಕ್ವಾಡ್ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ನ್ಯೂಯಾರ್ಕ್ ತಲುಪಿದ್ದರು. ಭಾರತದಲ್ಲಿ ಹೂಡಿಕೆಯನ್ನು ಆಕರ್ಷಿಸಲು ಐದು ಜಾಗತಿಕ ಸಿಇಒಗಳ ಜೊತೆ ಕೂಡ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
Discussion about this post