ಅಹವಾಲು ಹೊಂದಿರುವವರು ಪ್ರಜಾಪ್ರತಿನಿಧಿ ಕಾಯಿದೆ ಮತ್ತು ಮತದಾರರ ನೋಂದಣಿ ಕಾಯಿದೆ ಮತ್ತು ನಿಯಮಗಳ ಅಡಿ ಪರಿಹಾರ ಕೋರಬಹುದಾಗಿದೆ. ಕಾನೂನಿನ ಅಡಿ ಅಧಿಕಾರಿಗಳು ಮನವಿಯನ್ನು ಪರಿಗಣಿಸದಿದ್ದರೆ ಅವರು ಹೈಕೋರ್ಟ್ ಕದ ತಟ್ಟಬಹುದು ಎಂದ ಪೀಠ.
ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ಕೈಬಿಡಲು ಮತ್ತು ಪುನರ್ ಸೇರ್ಪಡೆ ಮಾಡುವ ವಿಚಾರದಲ್ಲಿ ಕಟ್ಟುನಿಟ್ಟಾಗಿ ನಿಬಂಧನೆಗಳನ್ನು ಪಾಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಶುಕ್ರವಾರ ನಿರ್ದೇಶಿಸಿರುವ ಕರ್ನಾಟಕ ಹೈಕೋರ್ಟ್ ಈ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದೆ.
ಬೆಂಗಳೂರಿನ ಸರ್ಕಾರೇತರ ಸಂಸ್ಥೆ ವೈಟ್ಫೀಲ್ಡ್ ರೈಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಮತದಾರರ ಪಟ್ಟಿಗೆ ಸೇರ್ಪಡೆ, ವರ್ಗಾವಣೆ ಅಥವಾ ಇನ್ನಾವುದೇ ಮಾರ್ಪಾಡು ಮಾಡುವ ಕುರಿತು ಸಲ್ಲಿಸಿದ ಮನವಿಯನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ವಿಲೇವಾರಿ ಮಾಡುವ ಸಂಬಂಧ ಕಾರ್ಯ ವಿಧಾನ ರೂಪಿಸುವ ಕುರಿತು ನಿರ್ದೇಶನ ನೀಡುವಂತೆ ಕೋರಿ 2018ರಲ್ಲಿ ವೈಟ್ಫೀಲ್ಡ್ ರೈಸಿಂಗ್ ಮನವಿ ಸಲ್ಲಿಸಿತ್ತು.
ಇಸಿಐ ಪ್ರತಿನಿಧಿಸಿದ್ದ ವಕೀಲ ಎಸ್ ಆರ್ ದೊಡವಾಡ ಅವರು “ಮತದಾರರ ಪಟ್ಟಿಯಲ್ಲಿ ಮತದಾರರ ಸೇರ್ಪಡೆ ಮತ್ತು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಕಾಲಮಿತಿಯಲ್ಲಿ ಅಹವಾಲನ್ನು ಪರಿಶೀಲಿಸುವ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಲಾಗಿದೆ” ಎಂದರು
ಕೃಪೆ: ಬಾರ್ ಅಂಡ್ ಬೆಂಚ್
Discussion about this post