ಬೆಂಗಳೂರು: ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿ ಭೇಟಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಹೀಗಾಗಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದಿದ್ದಾರೆ.
ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ( ದಾಬಸ್ ಪೇಟೆಯಿಂದ- ಮೈಸೂರು ರಸ್ತೆವರೆಗೆ) ಎರಡ್ಮೂರು ವರ್ಷಗಳಿಂದ ಬಾಕಿಯಿದೆ. ಇದಕ್ಕೆ ಕೇಂದ್ರ ಸಚಿವ ಗಡ್ಕರಿ ಸ್ಪಂಧಿಸಿದ್ದು, ಐದಾರು ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದ ನಾಲ್ಕೈದು ಹೆದ್ದಾರಿಗಳನ್ನು ನಿರ್ಮಾಣ ಮಾಡಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಜೊತೆಯೂ ಚರ್ಚೆ ಮಾಡಿದ್ದು, ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್ ಸಂಪರ್ಕಕ್ಕೆ ವಿಶೇಷ ಯೋಜನೆ ಮಾಡುವ ಬಗ್ಗೆಯೂ ಚರ್ಚೆಯಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜೊತೆಗೂಡಿ ಮುಂದುವರೆಯಲಿವೆ ಎಂದು ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಮತ್ತು ಕೋಲಾರದ ನಡುವೆ ಹಾರ್ಡ್ ವೇರ್ ಪಾರ್ಕ್ ಮಾಡುವ ಬಗ್ಗೆಯೂ ಚರ್ಚೆಯಾಗಿದೆ. ಸ್ಕಿಲ್ ಯೂನಿವರ್ಸಿಟಿ ಮಾಡಬೇಕು ಎಂಬ ಉದ್ದೇಶ ಇಟ್ಟುಕೊಂಡಿದ್ದಾರೆ. ಅದನ್ನು ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದೇವೆ.
ಸಬ್ ಅರ್ಬನ್ ರೈಲ್ವೇ ಸೇರಿದಂತೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Discussion about this post