ಚಿಕ್ಕಮಗಳೂರು: ಸಮಾಜದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವಿದ್ದು ಸಾಮಾಜಿಕ ಪರಿಕಲ್ಪನೆಯ ಮೂಲಕ ಪ್ರತಿಯೊಬ್ಬರು ಮಹಿಳೆಯರನ್ನು ಗೌರವದಿಂದ ಕಾಣಬೇಕು ಎಂದು ೨ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ನಂದೀಶ್ ಆರ್.ಪಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಬಳಿಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸ್ವಾವಲಂಬನೆ ಸಾಧಿಸುವ ಮೂಲಕ ಸಬಲರಾಗಬೇಕು, ಶಿಕ್ಷಣದ ಮೂಲಕ ಹೆಣ್ಣು ಪ್ರತಿ ರಂಗದಲ್ಲೂ ಸಾಧನೆ ಮಾಡಿ ಇನ್ನಷ್ಟು ಬಲಿಷ್ಠರಾಗಬೇಕು. ಇದರಿಂದಾಗಿ ಸಮಾಜದಲ್ಲಿ ಶಿಕ್ಷಕರು ಮತ್ತು ಪೋಷಕರಿಂದ ಉತ್ತಮ ಸಂಸ್ಕಾರವನ್ನು ಪಡೆದುಕೊಳ್ಳಲು ಸಾಧ್ಯ ಎಂದು ತಿಳಿಸಿದರು.
ಸಕಾರತ್ಮಕ ಅಂಶಗಳನ್ನೇ ನಾವು ಯಶಸ್ಸಿನ ಮೆಟ್ಟಿಲುಗಳನ್ನಾಗಿಸಿಕೊಂಡು ಪ್ರತಿ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರಬೇಕೆಂದು ಅವರು ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ, ದೌರ್ಜನ್ಯ ತಡೆಗಟ್ಟಬೇಕು ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್ ಮಾತನಾಡಿ, ಹೆಣ್ಣು ಮಕ್ಕಳು ಮೊದಲು ತಮ್ಮ ಸಾಮರ್ಥ್ಯದ ಬಗ್ಗೆ ಆತ್ಮ ವಿಶ್ವಾಸ ಹೊಂದಿರಬೇಕು ನಮ್ಮಿಂದ ಎಲ್ಲಾ ಕೆಲಸಗಳನ್ನು ಸಾಧಿಸಲು ಸಾಧ್ಯವೆಂಬ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು, ಸಮಾನತೆ ಮತ್ತು ಒಗ್ಗಟಿನಿಂದ ಸಮಾಜದಲ್ಲಿ ಬದುಕಬೇಕು ಎಂದು ಹೇಳಿದರು.
ಬಾಲ್ಯ ವಿವಾಹ ನಿವಾರಣೆಗೆ ಎಲ್ಲರೂ ಮುಂದಾಗಬೇಕು ಗ್ರಾಮಗಳಲ್ಲಿರುವ ಅಂಗನವಾಡಿ ಕಾರ್ಯಕರ್ತೆರಿಗೆ ಹೆಚ್ಚು ಜನರ ಬಳಕೆಯಿರುವುದರಿಂದ ಕಾರ್ಯಕರ್ತೆಯರ ಮೂಲಕ ಕಾನೂನಿನ ಅರಿವು ಮೂಡಿಸುವಂತಹ ಕೆಲಸ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಡಿ.ಬಿ ಸುಜೇಂದ್ರ ಅವರು ಮಾತನಾಡಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳಗಳಾದಲ್ಲಿ ಹಿಂಜರಿಕೆ ಪಡದೆ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ರಕ್ಷಣಾ ಸಮಿತಿಗೆ ದೂರು ಸಲ್ಲಿಸಬೇಕು, ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಸ್ವಾತಂತ್ರ್ಯ ಕಲ್ಪಿಸಿದೆ. ಸಮಾಜದಲ್ಲಿ ಮಹಿಳೆಯರು, ಮತ್ತು ಮಕ್ಕಳಿಗೆ ಸೂಕ್ತ ರಕ್ಷಣೆ ದೊರೆತಾಗ ಸ್ವಾಸ್ಥ ಸಮಾಜ ನಿರ್ಮಾಣವಾಗಲಿದೆ ಎಂದರು.
ವಕೀಲೆ ಡಿ.ಎಸ್ ಮಮತ ಮಹಿಳಾ ಸಬಲೀಕರಣ, ಬಾಲ್ಯವಿವಾಹ ತಡೆ ಕಾಯ್ದೆ ಮತ್ತು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಕಲಿಕೆ ಶುರುವಾಗುವುದರಿಂದ ಅಂಗನವಾಡಿಯಿಂದಲೇ ಮಕ್ಕಳಿಗೆ ಮಹಿಳೆಯ ಮೇಲೆ, ಹಿರಿಯರ ಮೇಲೆ ಗೌರವ ಮೂಡಿಸುವಂತಹ ಮನೋಭಾವನೆಯನ್ನು ಸೃಷ್ಠಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.
ಭಾರತದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ, ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕೇ ಹೊರತು ಕೀಳರಿಮೆಯಿಂದಲ್ಲ, ಹೆಣ್ಣನ್ನು ಗೌರವಿಸುವ ಸಮಾಜ ನಿರ್ಮಾಣವಾಗಬೇಕು ಎಂದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ. ಜಿ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾನೂನು ಪಾಲನೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯ
Discussion about this post