ಚಿಕ್ಕಮಗಳೂರು: ತಾಲ್ಲೂಕಿನ ಐ.ಡಿ. ಪೀಠ ಗ್ರಾಮಪಂಚಾಯಿತಿ ವ್ಯಾಪ್ತಿಯ ಪಂಡರವಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ೨೯ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರು ಘಟಕಕ್ಕೆ ಶುಕ್ರವಾರ ಶಾಸಕ ಸಿ.ಟಿ.ರವಿ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಜಲಜೀವನ್ ಮಿಷನ್ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಇದರಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ದೃಢ ಸಂಕಲ್ಪವನ್ನು ದೇಶದ ಪ್ರಧಾನಿಗಳು ಹೊಂದಿದ್ದಾರೆ ಅದನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಾರಂಭಗೊಂಡಿವೆ ಎಂದರು.
ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಜಿಲ್ಲೆಗೆ ವಿಶೇಷ ಆದ್ಯತೆ ನೀಡುವ ಮೂಲಕ ಸು. ೧೪೦೦ ಕೋಟಿಗೂ ಹೆಚ್ಚು ಅನುದಾನವನ್ನು ಕೇಂದ್ರದಿಂದ ಬಿಡುಗಡೆಗೊಳಿಸಿದ್ದಾರೆ. ಭದ್ರಾ ಕಣಿವೆಯಿಂದ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ ಜನತೆಗೆ ಕುಡಿಯುವ ನೀರು ಪೂರೈಕೆ ಅನುದಾನ. ಜತೆಗೆ ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆಗೆ ಜೆಜೆಎಂ ಅಡಿಯಲ್ಲಿ ಅನುದಾನ ಬಿಡುಗಡೆಗೊಳಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.
ಇಲ್ಲಿನ ಪಂಡರವಳ್ಳಿ ಗ್ರಾಮದಲ್ಲಿ ೨೯ ಲಕ್ಷ ರೂ. ವೆಚ್ಚದಲ್ಲಿ ಶುದ್ದಕುಡಿಯುವ ನೀರು ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಪ್ರಧಾನಿಗಳು ಬಡವರ ಪರವಾಗಿ ವಿಶೇಷ ಕಾಳಜಿ ಹೊಂದಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ೧೧ ತಿಂಗಳ ಕಾಲ ಉಚಿತ ಪಡಿತರ, ನೀಡಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ, ಜತೆಗೆ ಜನಧನ್ ಖಾತೆ, ಉಜ್ವಲ, ಸೌಭಾಗ್ಯ, ಮಾತೃವಂದನಾ ಸೇರಿದಂತೆ ಹಲವಾರ ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಕೊಂಡಾಡಿದರು.
ಜಿಲ್ಲೆಯ ಪ್ರವಾಸಿತಾಣಗಳನ್ನು ಸದಾ ಸ್ವಚ್ಚವಾಗಿಟ್ಟುಕೊಳ್ಳಲು ಸ್ಥಳೀಯ ಪಂಚಾಯಿತಿ ನಿಗಾವಹಿಸಬೇಕು, ಪ್ರವಾಸಿಗರಿಗೆ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕು, ಮೋಜು, ಮಸ್ತಿ ಮೂಲಕ ಪ್ಲಾಸ್ಟಿಕ್, ಬಾಟಲ್ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು.
ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಜೆ.ಡಿ.ಲೋಕೇಶ್ ಮಾತನಾಡಿ ಶಾಸಕರು ಪಂಡವಳ್ಳಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಆಧ್ಯತೆ ನೀಡಿ ವಿಶೇಷ ಅನುದಾನದ ಮೂಲಕ ಕಾಮಗಾರಿಗಳನ್ನು ಕೈಗೊಂಡಿದ್ದಾರೆ, ಶಾಲೆಗಳು, ರಸ್ತೆ, ಕುಡಿಯುವ ನೀರಿನ ಘಟಕ ಒಳಗೊಂಡಂತೆ ಜಿಲ್ಲೆಯಾದ್ಯಂತ ಹಲವು ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಪಂಡರವಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸುರೇಶ್ ಮಾತನಾಡಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ೨೯ ಲಕ್ಷದಲ್ಲಿ ಶುದ್ದಕುಡಿಯುವ ನೀರಿನ ಘಟಕ ನಿರ್ಮಾಣವಾಗುತ್ತಿದ್ದು ಇದರಿಂದಾಗಿ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.
ಶಾಸಕರು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿಶೇಷ ಆಧ್ಯತೆ ನೀಡಿ ಸುಮಾರು ೬೦ ಲಕ್ಷಕ್ಕೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಶಾಲೆ, ಆಸ್ಪತ್ರೆ, ಅಂಗನವಾಡಿ, ಕಾಂಕ್ರಿಟ್ ರಸ್ತೆ, ಒಳಗೊಂಡಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಶಿವೇಗೌಡ, ಗ್ರಾಮಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

























Discussion about this post