ಚಿಕ್ಕಮಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಛೇರಿ ಅವಧಿಯಲ್ಲಿ ಕಡ್ಡಾಯವಾಗಿ ಹಾಜರಿದ್ದು, ಗ್ರಾಮಗಳ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳಿಗೆ ಸೂಕ್ತ ಸಹಕಾರ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಂಗಳವಾರ ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಯೋಜನೆಗಳ ಕುರಿತು ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಒಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಗಳ ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಸಮಗ್ರ ಅನುಷ್ಠಾನ ಕುರಿತು ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಮತ್ತು ಪಿಡಿಒಗಳಿಗೆ ರಾಜ್ಯಾದ್ಯಂತ ಕಾರ್ಯಾಗಾರ ನಡೆಸಲಾಗುತ್ತಿದೆ. ಗ್ರಾಮಗಳಲ್ಲಿ ಪ್ರತಿ ಮನೆಗೂ ಶೌಚಾಲಯ, ರಸ್ತೆ, ಚರಂಡಿ, ಅಂಗನವಾಡಿ, ಶಾಲೆ, ಸಮುದಾಯ ಭವನ, ಕುಡಿಯುವ ನೀರು ಸೇರಿದಂತೆ ಪ್ರತಿಯೊಂದು ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಸರ್ಕಾರ ನೀಡಿರುವ ಅಂಕಿ ಅಂಶದಂತೆ ನರೇಗಾ ಯೋಜನೆಗಳಡಿಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಅಭಿವೃದ್ಧಿಯಲ್ಲಿ ಕರ್ನಾಟಕ ಮೊದಲ ಸ್ಥಾನಪಡೆದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ರೈತರಿಗೆ ಕೃಷಿ ಹೊಂಡ, ಕೆರೆಗಳ ಪುನಶ್ಚೇತನ, ಮಳೆ ನೀರುಕೊಯ್ಲು, ಬದು ನಿರ್ಮಾಣ, ಇಂಗುಗುಂಡಿಗಳ ನಿರ್ಮಾಣ ಒಳಗೊಂಡಂತೆ ರೈತರು ಹಾಗೂ ಗ್ರಾಮೀಣರಿಗೆ ಸಮಗ್ರ ಮಾಹಿತಿ ನೀಡಿ ಯೋಜನೆಯ ಲಾಭಪಡೆಯುವಂತೆ ಮಾಡಬೇಕು ಎಂದು ಸೂಚಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಛೇರಿ ಅವಧಿಯಲ್ಲಿ ಕಡ್ಡಾಯವಾಗಿ ಗ್ರಾಮಪಂಚಾಯಿತಿಯಲ್ಲಿ ಹಾಜರಿರಬೇಕು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ಸಲಹೆ ಮಾರ್ಗದರ್ಶನ ನೀಡುವಂತೆ ತಿಳಿಸಿದರು.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಹೆಚ್ಚು ಆದ್ಯತೆ ನೀಡಬೇಕು, ನಿವೇಶನ ರಹಿತರಿಗೆ ಸೂಕ್ತ ಕಂದಾಯ ಜಾಗ ಹುಡುಕಿ ನಿವೇಶನ ಹಂಚಿಕೆ ಮಾಡಬೇಕು, ಬಯಲು ಮುಕ್ತ ಶೌಚಾಲಯವನ್ನಾಗಿಸಲು ಶ್ರಮಿಸಬೇಕು, ಮನೆ ಮನೆಗೆ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಬೇಕು, ಪಂಚಾಯಿತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳಿಂದ ದೂರುಗಳು ಬಂದಲ್ಲಿ ಸೂಕ್ತ ಕ್ರಮವಹಿಸಲಾಗುವುದು ಎಂದು ಎಚ್ಚರಿಸಿದರು.
ಯೋಜನೆಗಳ ಸಮಗ್ರ ಅನುಷ್ಠಾನ ಹಾಗೂ ಹಳ್ಳಿಗಳ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ s ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಆಯಾ ವಿಧಾನ ಸಭಾ ಕ್ಷೇತ್ರದಲ್ಲಿನ ಪಂಚಾತಿಯಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಹೇಳಿದರು.
ಅರ್ಜಿಗಳ ಶೀಘ್ರ ವಿಲೇವಾರಿ ಜನತೆ ಸಾರ್ವಜನಿಕರಿಗೆÉ ತ್ವರಿತ ಗತಿಯಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಮಪಂಚಾಯಿತಿಗಳು ಕಡ್ಡಾಯವಾಗಿ ಸೋಲಾರ್ ವಿದ್ಯುತ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು, ಇದಕ್ಕಾಗಿ 13ನೇ ಹಣಕಾಸು ಯೋಜನೆ ಅಥವಾ ಶಾಸಕರು, ಸಂಸದರ ಅನುದಾನವನ್ನು ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ ಭಾರತವು ಹಳ್ಳಿಗಳ ದೇಶವಾಗಿದ್ದು ಮಹಾತ್ಮಗಾಂಧೀಜಿಯವರ ರಾಮರಾಜ್ಯ, ಸ್ವಚ್ಚಗ್ರಾಮದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ ಆ ನಿಟ್ಟಿನಲ್ಲಿ ದೇಶದ ಪ್ರಧಾನಮಂತ್ರಿಗಳು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದÀರು.
ಗ್ರಾಮಗಳ ಪ್ರತಿ ಮನೆಗಳಲ್ಲಿ ಶೌಚಾಲಯ ನಿರ್ಮಾಣ, ಕುಡಿಯುವ ನೀರು, ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡುವ ಮೂಲಕ ಆಯಾ ಗ್ರಾಮಪಂಚಾಯಿತಿಗಳಲ್ಲಿ ಅಭಿವೃದ್ಧಿಯ ಕ್ರಾಂತಿಕಾರಕ ಬದಲಾವಣೆಗೆ ನಾಂದಿ ಹಾಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಾದರಿ ಗ್ರಾಮಗಳನ್ನಾಗಿಸಲು ಕರೆ ನೀಡಿದರು.
ನರೇಗಾ ಯೋಜನೆ, ಶಾಲೆ, ಅಂಗನವಾಡಿ, ರಸ್ತೆ ಅಭಿವೃದ್ಧಿ, ಘನತ್ಯಾಜ್ಯ ನಿರ್ವಹಣೆ, ಕೆರೆಗಳ ಪುನಶ್ಚೇತನ, ಕುಡಿಯುವ ನೀರು ಒಳಗೊಂಡಂತೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಮಹತ್ವ ನೀಡಬೇಕಿದೆ, ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆಯುತ್ತಿದ್ದರು ಗ್ರಾಮೀಣಭಾಗದಲ್ಲಿ ಹಲವು ಸಮಸ್ಯೆಗಳು ಪರಿಹಾರವಾಗಿಲ್ಲ ಈ ದಿಸೆಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರು, ಪಿಡಿಒಗಳು ಹಾಗೂ ಸದಸ್ಯರು ಮುಂದಾಗಬೇಕು ಎಂದು ತಿಳಿಸಿದರು.
ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ ಗ್ರಾಮಪಂಚಾಯಿತಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವುದು ಇತಿಹಾಸವಿದ್ದಂತೆ, ಜನರ ವಿಶ್ವಾಸದ ಮೇಲೆ ನಡೆಯುವ ಚುನಾವಣೆ ಇದಾಗಿದ್ದು ಅವರ ನಂಬಿಕೆ ಆಶಯಗಳನ್ನು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ಈಡೇರಿಸಬೇಕು ಎಂದರು.
ಗ್ರಾಮಪಂಚಾಯಿತಿಗಳಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಮನ್ವಯತೆ ಇರಬೇಕು. ಪಿಡಿಒಗಳು ಹೆಚ್ಚು ಜವಾಬ್ದಾರಿಯುವಾಗಿ ಸರ್ಕಾರದ ಯೋಜನೆಗಳನ್ನು ಜನರಿಗೆ ಅರಿವು ಮೂಡಿಸಬೇಕು, ಕೋವಿಡ್ ಹಿನ್ನಲೆ ಬಹುತೇಕ ಗ್ರಾಮಪಂಚಾಯಿತಿಗಳಲ್ಲಿ ಅನುದಾನದ ಕೊರತೆ ಇದೆ ಮುಂದಿನ ದಿನಗಳಲ್ಲಿ ಹೊಸ ಯೋಜನೆಗಳು ಅನುಷ್ಠಾನಕ್ಕೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಪಿಡಿಒಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ಮಂತ್ರಿಗಳಲ್ಲಿ ಕೇಳಿಕೊಂಡರು.
ಶಾಸಕ ಸಿ.ಟಿ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮಪಂಚಾಯಿತಿಗಳಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜೋಡೆತ್ತಿನ ಮಾದರಿಯಲ್ಲಿ ಕೆಲಸ ಮಾಡಬೇಕು, ಅವರೊಟ್ಟಿಗೆ ಸಮನ್ವಯತೆ, ಯೋಜನಾ ಬದ್ದತೆ ಇದ್ದಾಗ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಹಳ್ಳಿಗಳು ಹೆಚ್ಚು ಸ್ವಾವಲಂಬನೆ ಸಾಧಿಸಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಕೆರೆಕಟ್ಟೆಗಳ ಅಭಿವೃದ್ಧಿ, ಕುಡಿಯುವ ನೀರು, ರಸ್ತೆ, ಶಾಲೆ, ಅಂಗನವಾಡಿ ದುರಸ್ಥಿ ಒಳಗೊಂಡಂತೆ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು ಈ ಮೂಲಕ ಮಹಾತ್ಮ ಗಾಂಧೀಜಿಯವರ ಸುಖಿರಾಜ್ಯದ ಕಲ್ಪನೆಯನ್ನು ಈಡೇರಿಸಬೇಕಿದೆ ಎಂದರು.
ಜಲಧಾರೆ ಯೋಜನೆ ಅಡಿಯಲ್ಲಿ ಜಿಲ್ಲೆಯ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ ಸುಮಾರು 929 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗೆ ಡಿಪಿಆರ್ ತಯಾರಾಗಿದ್ದು ನಬಾರ್ಡ್ ಪ್ರಸ್ತಾವನೆ ಕಳುಹಿಸಲಾಗಿದ್ದು ಕ್ಯಾಬಿನೆಟ್ನಲ್ಲಿ ಚರ್ಚಿಸಿ ಅನುಮೋದನೆ ದೊರಕಿಸಿಕೊಡುವಂತೆ ಸಚಿವರಲ್ಲಿ ವಿನಂತಿ ಮಾಡಿದರು.
ದೇಶದಲ್ಲಿ 13 ಕೋಟಿ ಶೌಚಾಲಯ ನಿರ್ಮಾಣ ಮಾಡುವ ಮೂಲಕ ತಾಯಂದಿರು ಗೌರವಯುತವಾಗಿ ಬದುಕುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ, ಆ ನಿಟ್ಟಿನಲ್ಲಿ ಸಮುದಾಯ ಶೌಚಾಯಲಗಳಿಗೆ ನರೇಂದ್ರ ಮೋದಿಯವರ ಹೆಸರಿಡಬೇಕು ಅದು ಅಗೌರವವಲ್ಲ ಬದಲಾಗಿ ಸ್ವಾಭಿಮಾನದ ಸಂಕೇತ ಎಂದು ಹೇಳಿದರು.
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಕುರಿತು ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರ ನಡೆಯಿತು. ಜನತೆ ವಿವಿದ ಇಲಾಖೆಗಳ ಕುರಿತು ವಸ್ತುಪ್ರದರ್ಶನ ಏರ್ಪಡಿಸಲಾಗಿತ್ತು. ಹಳ್ಳಿಗಳಲ್ಲಿ ಮನೆ ಮನೆ ಕಸಸಂಗ್ರಹಣೆ ಮಾಡುವ ನಿಟ್ಟಿನಲ್ಲಿ ಪ್ರತಿ ಗ್ರಾಮಪಂಚಾಯಿತಿಗೆ ನೀಡಲಾದ ಸ್ವಚ್ಚವಾಹಿನಿ ಹೆಸರಿನ 50 ಆಟೋಟಿಪ್ಪರ್ಗಳಿಗೆ ಸಚಿವರು, ಜನಪ್ರತಿನಿಧಿಗಳು ಚಾಲನೆ ನೀಡಿದರು.
ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಪ್ರಾಸ್ತವಿಕವಾಗಿ ಮಾತನಾಡಿ ಜಿಲ್ಲೆಯ ಯೋಜನೆಗಳ ಕುರಿತಾಗಿ ಸಮಗ್ರವಾದ ಮಾಹಿತಿ ನೀಡಿ ಗಣ್ಯರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಎಂ.ಪಿ.ಕುಮಾರಸ್ವಾಮಿ, ಡಿ.ಎಸ್.ಸುರೇಶ್. ಬೆಳ್ಳಿಪ್ರಕಾಶ್, ಟಿ.ಡಿ ರಾಜೇಗೌಡ, ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ಜಿಲ್ಲಾಧಿಕಾರಿ ಕೆ.ಎನ್,ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

























Discussion about this post