ಚಿಕ್ಕಮಗಳೂರು: ಯಾವೊಬ್ಬ ವ್ಯಕ್ತಿಯು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್ ತಿಳಿಸಿದರು.
ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೌರಾಡಳಿತ ಮತ್ತು ನಗರಾಭಿವೃದ್ಧಿ, ಕೃಷಿ, ತೋಟಗಾರಿಕೆ, ಸಾಮಾಜಿಕ ಅರಣ್ಯ, ಸಾರ್ವಜನಿಕ ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಯಾವ ಒಬ್ಬ ವ್ಯಕ್ತಿಯು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರವು ೧೯೮೭ ರಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಒಬ್ಬ ವ್ಯಕ್ತಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರದ ಪಾತ್ರ ಪ್ರಮುಖವಾಗಿದೆ ಈ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಡಿಕೊಳ್ಳುವಂತೆ ಸಲಹೆ ನೀಡಿದರು.
ಒಂದು ದೇಶ ಸದೃಢವಾಗಿರಬೇಕೆಂದರೆ ಪ್ರಜೆಗಳು ಉತ್ತಮ ಆರೋಗ್ಯ ಹೊಂದುವ ಮೂಲಕ ಸದೃಢವಾಗಿರಬೇಕು ಹಾಗೂ ಗರ್ಭಿಣಿಯರ ಪೌಷ್ಟಿಕ ಆಹಾರ ಸೇವನೆ ಅಗತ್ಯವಾಗಿದ್ದು ಆರೋಗ್ಯವಂತ ಮಗು ಹುಟ್ಟಿದರೆ ಆರೋಗ್ಯವಂತ ಸಮಾಜ ಸೃಷ್ಠಿಯಾಗಲಿದೆ ಎಂದ ಅವರು ತಾಯಿ, ಮಕ್ಕಳ ಆರೋಗ್ಯ ಕಾಪಾಡಲು ಕೇಂದ್ರ ಸರ್ಕಾರ ಪೋಷಣ್ ಅಭಿಯಾನ ಜಾರಿಗೆ ತಂದಿದ್ದು, ಮಾತೃವಂದನಾ ಹಾಗೂ ಪೋಷಣ್ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು ಎಂದರು.
ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಒಂದು ಮಗು ಸದೃಢವಾಗಿ ಬೆಳೆಯಬೇಕೆಂದರೆ ತಾಯಿಯು ಗರ್ಭಾವಸ್ಥೆಯಿಂದ ಉತ್ತಮ ಪೌಷ್ಠಿಕ ಆಹಾರವನ್ನು ಸೇವಿಸಬೇಕು ಹಾಗೂ ಮಗುವಿಗೆ ತಾಯಿಯ ಎದೆ ಹಾಲು ಪ್ರಮುಖವಾದುದ್ದಾಗಿದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದ್ದು ಯಾವುದೇ ಮೂಢನಂಬಿಕೆ ಹಾಗೂ ಆಚಾರ-ವಿಚಾರಗಳಿಗೆ ಒಳಗಾಗದೆ ಮಗುವಿಗೆ ಎದೆ ಹಾಲು ಉಣಿಸುವುದರ ಮೂಲಕ ಮಕ್ಕಳನ್ನು ಅಪೌಷ್ಟಿಕತೆಯಿಂದ ಕಾಪಾಡಬೇಕು ಎಂದು ತಿಳಿಸಿದರು.
ನಾವು ೨೧ ನೇ ಶತಮಾನದಲ್ಲಿ ಇದ್ದರೂ ಸಹ ಬಾಲ್ಯವಿವಾಹ, ಹೆಣ್ಣು ಮಕ್ಕಳ ಸಾಗಾಣಿಕೆ ಹೆಚ್ಚಾಗಿ ಕಂಡುಬರುತ್ತಿದ್ದು ಇಂತಹ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ವಿ.ಟಿ ಥಾಮಸ್ ಮಾತನಾಡಿ, ಒಂದು ಕುಟುಂಬದಲ್ಲಿ ಸದಸ್ಯರು ಖುಷಿಯಿಂದ ಇರಲು ಮುಖ್ಯವಾಗಿ ಎಲ್ಲರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಉತ್ತಮ ಆರೋಗ್ಯ ಹೊಂದಲು ಉತ್ತಮವಾದ ಪೌಷ್ಠಿಕಾಂಶವುಳ್ಳ ಆಹಾರವನ್ನು ಸೇವಿಸಬೇಕು, ಗರ್ಭವತಿಯಾದ ದಿನದಿಂದ ತಾಯಂದಿರು ಉತ್ತಮ ಆಹಾರ ಸೇವಿಸುವುದರಿಂದ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಈ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಪೌಷ್ಟಿಕ ಆಹಾರವನ್ನು ನೀಡುತ್ತಿದ್ದು, ಸರ್ಕಾರದ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿ ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಮಾತನಾಡಿ, ಸರ್ಕಾರ ಹಾಗೂ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಿದರೆ ಪೋಷಣ ಅಭಿಯಾನ ವಾಸ್ತವವಾಗಿ ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ ಅಂತಹವರ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದ ಅವರು ಸಾರ್ವಜನಿಕರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಂಬಂಧಿಸಿದ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ಕೋವಿಡ್ ಸಂದರ್ಭದಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ತಾಯಂದಿರು ಬಾಲ್ಯವಿವಾಹ ಕಂಡುಬಂದಲ್ಲಿ ತಕ್ಷಣ ಸಂಬಂಧಿಸಿದ ಇಲಾಖೆಗೆ ತಿಳಿಸಬೇಕು, ನಿಮ್ಮ ಮೇಲೆ ಪೊಲೀಸ್ ಇಲಾಖೆಯ ರಕ್ಷಣೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಬಗ್ಗೆ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಅರ್ಹ ಫಲಾನುಭವಿ ತಾಯಂದರಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಪ್ಪ. ಬಿ.ಹೆಚ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಟಿ.ಆರ್ ಹಾಗೂ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿ ದ್ದರು.

























Discussion about this post