ಹೈಕೋರ್ಟ್ ಮತ್ತು ಸುಪ್ರೀಂ ಆದೇಶ ಉಲ್ಲಂಘಿಸಿ 2015ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ 541 ಎಕರೆ ಜಮೀನನ್ನು ಅರ್ಕಾವತಿ ಬಡಾವಣೆಯಲ್ಲಿ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾ. ಕೆಂಪಣ್ಣ ಆಯೋಗ ನೇಮಿಸಲಾಗಿತ್ತು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಭಾರಿ ಸದ್ದು ಮಾಡಿದ್ದ ಅರ್ಕಾವತಿ ಭೂ ಅವ್ಯವಹಾರ ಹಗರಣ ಮುನ್ನೆಲೆಗೆ ಬಂದಿದ್ದು, ಹಗರಣದ ತನಿಖೆಗೆ ಸಂಬಂಧಿಸಿದಂತೆ ನೇಮಿಸಲಾಗಿದ್ದ ನಿವೃತ್ತ ನ್ಯಾ. ಎಚ್ ಎಸ್ ಕೆಂಪಣ್ಣ ನೇತೃತ್ವದ ಏಕಸದಸ್ಯ ಆಯೋಗವು ಸಲ್ಲಿಸಿರುವ ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೋಮವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಸಾರ್ವಜನಿಕ ಹೊಣೆಗಾರಿಕೆ ಸಮಿತಿ (ಸಿಪಿಸಿ) ಸಲ್ಲಿಸಿದ್ದ ಪಿಐಎಲ್ ಅನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠವು ನಡೆಸಿತು. ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿರುವ ಪೀಠವು ಹೆಚ್ಚಿನ ಪರಿಗಣೆನೆಗಾಗಿ ಪ್ರಕರಣವನ್ನು ನವೆಂಬರ್ 15ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.
ಅರ್ಕಾವತಿ ಬಡಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಆಗಸ್ಟ್ 23ರಂದು ನಿವೃತ್ತ ನ್ಯಾ. ಕೆಂಪಣ್ಣ ಅವರ ಆಯೋಗವು ವರದಿ ಸಲ್ಲಿಸಿದೆ. ತನಿಖಾ ಆಯೋಗದ ಕಾಯಿದೆ 1952ರ ಸೆಕ್ಷನ್ 3 (4) ಪ್ರಕಾರ ವರದಿ ಸಲ್ಲಿಸಿದ ಆರು ತಿಂಗಳ ಒಳಗೆ ರಾಜ್ಯ ಸರ್ಕಾರವು ವರದಿ ಮತ್ತು ಆ ಸಂಬಂಧ ಕೈಗೊಂಡಿರುವ ಕ್ರಮದ ಕುರಿತ ಮಾಹಿತಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಬೇಕು. ಆದರೆ, ಈ ಪ್ರಕರಣದಲ್ಲಿ ಆಯೋಗವು ವರದಿ ಸಲ್ಲಿಸಿ ನಾಲ್ಕು ವರ್ಷಗಳಾದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡಲಾಗದು ಎಂಬ ನಿರ್ಧಾರಕ್ಕೆ ನ್ಯಾಯಾಲಯ ಬಂದರೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆಗೆ ಆದೇಶಿಸಬೇಕು” ಎಂದು ಸಿಪಿಸಿಯು ನ್ಯಾಯಾಲಯಕ್ಕೆ ಮನವಿ ಮಾಡಿದೆ.
ಕೃಪೆ – ಬಾರ್ ಅಂಡ್ ಬೆಂಚ್

























Discussion about this post