ಚಿಕ್ಕಮಗಳೂರು : ಬಿಜೆಪಿಯಲ್ಲಿನ ತಮ್ಮ ಹುಳುಕು ಮುಚ್ಚಿಕೊಳ್ಳಲು ಭಾಷಣವೊಂದರಲ್ಲಿ ವಿಪಕ್ಷ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಇಲಾಖೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ ಹೂವಪ್ಪ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಕ್ಕೂ ಸಮಾನ ನ್ಯಾಯ ಒದಗಿಸಲು ಶ್ರಮಿಸಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಬಿಜೆಪಿ ದಲಿತರ ನಾಯಕರ ಬಗ್ಗೆ ನೀಡಿದ್ದ ಹೇಳಿಕೆಯನ್ನು ತಿರುಚಲಾಗಿದೆ ಎಂದು ದೂಷಿಸಿದರು.
ದಲಿತರಿಗೆ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಬೀದಿಗಿಳಿದು ಹೋರಾಟ ಮಾಡುವ ಬಿಜೆಪಿ ಪಕ್ಷದ ದಲಿತ ನಾಯಕರು, ತಮ್ಮದೇ ಪಕ್ಷದ ಅನಂತ್ಕುಮಾರ್ ಹೆಗ್ಡೆ ಸಂವಿಧಾನ ಬದಲಾವಣೆ ಮಾಡುವ ಸಲುವಾಗಿಯೇ ನಾವು ಅಧಿಕಾರಕ್ಕೆ ಬಂದಿರುವುದು ಎನ್ನುವಾಗ ದಲಿತ ಮುಖಂಡರು ಮೌನವಾಗಿದ್ದೇಕೆ? ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ದಿನವೇ ಅವರ ಕೊಠಡಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ತೆಗಿಸಿದ್ದು ದಲಿತರಿಗೆ ಮಾಡಿದ ಅಪಮಾನವಲ್ಲವೇ ಎಂದು ಪ್ರಶ್ನಿಸಿದರು.
ದೇಶದಲ್ಲಿ ಅಸ್ಪೃಶ್ಯತೆ ಎಂಬುದೂ ಇನ್ನೂ ಜೀವಂತವಾಗಿದೆ. ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿವೆ ಈ ಬಗ್ಗೆ ದಲಿತ ಮುಖಂಡರು ಯಾಕೆ ಪ್ರಶ್ನೆ ಮಾಡಲ್ಲ ಎಂದು ಸವಾಲು ಹಾಕಿದರು.
ಪರಿಶಿಷ್ಟರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ೮೮ ಸಾವಿರ ಕೋಟಿ ರೂ ಬಿಡುಗಡೆಗೊಳಿಸಿತು. ಆದರೆ ಬಿಜೆಪಿ ಸರ್ಕಾರ ಕೇವಲ ೨೨ ಸಾವಿರ ಕೋಟಿ ಬಿಡುಗಡೆಗೊಳಿಸಿ ದಲಿತ ಸಮುದಾಯಕ್ಕೆ ಅಪಮಾನ ಮಾಡಿದೆ, ಅಲ್ಲದೇ ಕೋವಿಡ್ ನೆಪವೊಡ್ಡಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೂ ತಡೆಯೊಡ್ಡಿದೆ ಇದೆಲ್ಲವನ್ನು ಗಮನಿಸಿದರೆ ಬಿಜೆಪಿಗೆ ದಲಿತರ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಅರ್ಥವಾಗಲಿದೆ ಎಂದು ವ್ಯಂಗ್ಯವಾಡಿದರು.
ಮುಖಂಡ ಸತೀಶ್ ಮಾತನಾಡಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರ ಕುಮ್ಮಕ್ಕಿದೆ. ಕುರುಬ ಸಮಾಜ ಮಾಡಿದ ಹೋರಾಟಕ್ಕೆ ಪ್ರತೀಕಾರವಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಅಪಪ್ರಚಾರ ಮಾಡಲು ಈ ರೀತಿಯ ವಿರೋಧಿ ಚಳುವಳಿ ನಡೆಸಲಾಗಿದೆ ಎಂದು ಆರೋಪಿಸಿದರು.
ಮೂಡಿಗೆರೆ ಬಿಜೆಪಿಯ ಹಿರಿಯ ದಲಿತ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದಾಗ ಬಿಜೆಪಿ ದಲಿತ ನಾಯಕರು ಎಲ್ಲಿದ್ದರು? ಜಿಲ್ಲಾ ಪಂಚಾಯಿತಿಯಲ್ಲಿ ದಲಿತ ಮಹಿಳೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸಿದಾಗ ಪ್ರತಿಭಟಿಸದೆ, ಬೆಂಬಲವನ್ನೂ ನೀಡದ ದಲಿತ ಮುಖಂಡರು ಇದೀಗ ಸಿದ್ದರಾಮಯ್ಯ ಹೇಳಿಕೆ ನಮ್ಮ ಸಮಾಜಕ್ಕೆ ನೋವುಂಟು ಮಾಡಿದೆ ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ ಬಿಜೆಪಿಯಲ್ಲಿ ದಲಿತ ನಾಯಕರನ್ನು ಬಳಸಿಕೊಳ್ಳುತ್ತಿರುವ ರೀತಿ, ವಾಸ್ತವ ಸ್ಥಿತಿಗತಿಗಳ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಸರ್ವ ಜನಾಂಗಕ್ಕೂ ಶ್ರಮಿಸುತ್ತಿರುವ ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚುವ ಕೆಲಸ ಮಾಡಲಾಗಿದೆ ಇದರಲ್ಲಿ ಷಡ್ಯಂತ್ರ ಅಡಗಿದೆ ಅಂತಾ ಆರೋಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಇಲಾಖೆ ಜಿಲ್ಲಾ ಕಾರ್ಯದರ್ಶಿ ಶಾಂತಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಅನಂತ್, ಉಪಸ್ಥಿತರಿದ್ದರು.
ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಿ ಎಲ್ಲರೂ ಸಮಾನರಾಗಿ ಬದುಕುವಂತಾಗಬೇಕು; ಸಿದ್ದರಾಮಯ್ಯ ಆಶಯ

























Discussion about this post