ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಸ್ವರಾಜ್ ಯಾತ್ರೆಗೆ ನವೆಂಬರ್ ೧೮ ರಂದು ಚಿಕ್ಕಮಗಳೂರಿನಲ್ಲಿ ಚಾಲನೆ ಸಿಗಲಿದೆ ಎಂದು ಬಿಜೆಪಿ ವಕ್ತಾರ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ ೧೧ ಗಂಟೆಗೆ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆಯುವ ಜನಸ್ವರಾಜ್ ಯಾತ್ರೆ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟನೆ ಮಾಡಲಿದ್ದಾರೆ.
ಒಟ್ಟು ೪ ತಂಡಗಳಲ್ಲಿ ರಾಜ್ಯಾದ್ಯಂತ ಯಾತ್ರೆ ನಡೆಯುತ್ತಿದ್ದು ಇದರ ಮೂಲ ಉದ್ದೇಶ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳು ಹಾಗೂ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುವುದು ಜತೆಗೆ ವಿಧಾನ ಪರಿಷತ್ ಚುನಾವಣೆ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಂಘಟನೆಗೊಳಿಸುವ ನಿಟ್ಟಿನಲ್ಲಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಬೆಂಬಲಿತ ೧೪೨೧ ಸದಸ್ಯರು ಸೇರಿದಂತೆ ಸುಮಾರು ೨೫೦೦ ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಶ್ವರಪ್ಪ ನೇತೃತ್ವದ ೩ನೇ ತಂಡದಲ್ಲಿ ಮಾಜಿ ಸಿಎಂ ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಆರ್.ಅಶೋಕ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್, ಮೀನುಗಾರಿಕೆ ಸಚಿವ ಅಂಗಾರ, ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಶಂಕರಪ್ಪ ಇರಲಿದ್ದಾರೆ.
ಜನಸ್ವರಾಜ್ ಯಾತ್ರೆ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಸಿ.ಟಿ ರವಿ. ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಮೂಡಿಗೆರೆ ಶಾಸಕ ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಡಿ.ಎಸ್.ಸುರೇಶ್, ಜೀವರಾಜ್, ಸೇರಿದಂತೆ ಜಿಲ್ಲೆಯ ಪಕ್ಷದ ಪ್ರಮುಖ ನಾಯಕರು ಮಂಡಲದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರೇಮ್ಕುಮಾರ್, ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಯುವಮೋರ್ಚಾದ ಕೌಶಿಕ್, ಸಚಿನ್, ಸುಧೀರ್ ಉಪಸ್ಥಿತರಿದ್ದರು.
ಇದನ್ನೂ ಓದಿ:
Politics: ಬಿಜೆಪಿಯವರು ದೇಶವನ್ನು ಮುಂದಿನ 100 ವರ್ಷಗಳ ಕಾಲ ಆಳುವ ಭ್ರಯಮೆಲ್ಲಿದ್ದಾರೆ: ಖರ್ಗೆ
Discussion about this post