ಚಿಕ್ಕಮಗಳೂರು : ದೇಶದಲ್ಲಿ ಪ್ರತಿಯೊಬ್ಬ ನಾಗರೀಕರಿಗೂ ಸಾಮಾನ್ಯ ಕಾನೂನಿನ ತಿಳುವಳಿಕೆ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು. ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ ಒಳಗೊಂಡಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ ಮಕ್ಕಳ ರಕ್ಷಣೆಯ ವಿವಿಧ ಕಾಯ್ದೆಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಸಂವಿಧಾನದಲ್ಲಿ ಮಕ್ಕಳ ರಕ್ಷಣೆಗಾಗಿ ಹಲವು ವಿಧವಾದ ಕಾಯ್ದೆ ಕಾನೂನುಗಳನ್ನು ರೂಪಿಸಿದೆ. ಆದರೆ ಗ್ರಾಮೀಣ ಭಾಗದಲ್ಲಿ ಬಹುತೇಕ ಶೇ ೭೫ ರಷ್ಟು ಮಂದಿಗೆ ಸಾಮಾನ್ಯ ಕಾನೂನಿನ ಅರಿವು ಇಲ್ಲದಿರುವುದು ವಿಪರ್ಯಾಸದ ಸಂಗತಿ. ಕಾಯ್ದೆ ಕಾನೂನುಗಳ ಪರಿಣಾಮಕಾರಿ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ ಎಂದು ಕಥೆಯೊಂದರ ಮೂಲಕ ವಿವರಿಸಿ ಹೇಳಿದರು.
ಮೌಲ್ಯಯುತ ಶಿಕ್ಷಣದ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ, ಕ್ರೀಡೆ, ಮುಂತಾದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಸಮುದಾಯ ಹಾಗೂ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ಸಂವಿಧಾನವು ಕಾನೂನಿನ ಅಡಿಯಲ್ಲಿ ಬಾಲಕಾರ್ಮಿಕತೆ ನಿಷೇಧ ಕಾಯ್ದೆ ಜಾರಿ ತಂದಿದ್ದು ಜತೆಗೆ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕು ನೀಡಿದೆ. ಇವೆಲ್ಲವುಗಳ ಸಾಮಾನ್ಯ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯ ಎಂದರು.
ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚುತ್ತಿದ್ದು ಜತೆಗೆ ಬಾಲಾಪರಾಧವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ವ್ಯವಸ್ಥೆಯ ಇಲಾಖೆಗಳು ಸಾರ್ವಜನಿಕರಿಗೆ ಅರಿವು, ಜನಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಜತೆಗೆ ಮಕ್ಕಳಿಗೆ ಹಕ್ಕು, ಕರ್ತವ್ಯ, ಜವಾಬ್ದಾರಿಯನ್ನು ತಿಳಿಸುವ ಕಾರ್ಯಗಳಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ದೇಶದ ಸಂವಿಧಾನವು ಅತ್ಯಂತ ದೂರದೃಷ್ಟಿ ಹೊಂದಿ ಕ್ರಿಯಾತ್ಮಕವಾಗಿ ಕಾನೂನುಗಳನ್ನು ರೂಪಿಸಿದೆ. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಒಮ್ಮತದಿಂದ ಕಾರ್ಯನಿರ್ವಹಿಸಿದಾಗ ಸಮಗ್ರವಾಗಿ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಿಸಿದರು.
ದೇಶದಲ್ಲಿ ಪ್ರತಿಶತ ಶೇ.೨೮ ರಷ್ಟು ೦-೧೪ ಮಕ್ಕಳಿದ್ದು ಅದರಲ್ಲಿ ಶೇ ೪೭ ರಷ್ಟು ಬಾಲಕಿಯರು ಹಾಗೂ ಶೇ.೫೩ ರಷ್ಟು ಬಾಲಕರು ಇದ್ದಾರೆ. ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿರಲು ಹಲವು ಕಾರಣಗಳಿವೆ. ಜಿಲ್ಲೆಯಲ್ಲಿ ಒಟ್ಟು ೧೮೨೫ ಅಂಗನವಾಡಿ ಕೇಂದ್ರಗಳಿದ್ದು. ಆಟದ ಮೈದಾನ, ಕೈತೋಟ, ಶೌಚಾಲಯ, ಸುಸ್ಸಜ್ಜಿತ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಮಗುವಿನ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ೧೭೫೦ ಸುಸ್ಸಜ್ಜಿತ ಅಂಗನವಾಡಿಗಳಿದ್ದು ಮುಂದಿನ ೨ ವರ್ಷದಲ್ಲಿ ಎಲ್ಲ ಅಂಗನವಾಡಿಗಳನ್ನು ಮಾದರಿಯನ್ನಾಗಿಸಿ ಸಮರ್ಥವಾಗಿ ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಬಾಲಾಪರಾಧ ತಡೆಗಟ್ಟುವ ಜತೆಗೆ ಮಕ್ಕಳ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಗಳಲ್ಲಿಯೂ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸುವ ಕುರಿತು ಚಿಂತಿಸಲಾಗಿದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಗನಾಥ್ ಪ್ರಾಸ್ತವಿಕವಾಗಿ ಮಾತನಾಡಿ ದೇಶದಲ್ಲಿ ಮಕ್ಕಳ ರಕ್ಷಣೆಗಾಗಿ ಸಂವಿಧಾನವು ಹಲವು ಕಾಯ್ದೆ ಕಾನೂನುಗಳನ್ನು ರೂಪಿಸಿದೆ. ರಾಜ್ಯದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬಾಲನ್ಯಾಯಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಹಲವು ಘಟಕಗಳನ್ನು ಸ್ಥಾಪಿಸಿದ್ದು ಬಾಲ್ಯವಿವಾಹ, ಪೋಕ್ಸೋದಂತಹ ಪ್ರಕರಣ ತಡೆಗಟ್ಟುವ ಮೂಲಕ ಮಕ್ಕಳ ರಕ್ಷಣೆಗೆ ಮಾಡಲಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್ ಅಕ್ಷಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಸಂರಕ್ಷಣಾಯೋಜನೆ ಯುನಿಸೆಫ್ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್. ಶಿವಮೊಗ್ಗ ಪೊಲೀಸ್ ತರೆಬೇತುದಾರ ಸೋಮಶೇಖರಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ೨ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ನಂದೀಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪದ್ಮಾವತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್, ಸೇರಿದಂತೆ ಮತ್ತಿತರರು ಇದ್ದರು.
ಇದನ್ನೂ ಓದಿ:
Discussion about this post