ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಸುರಿದ ಅಕಾಲಿಕ ಮಳೆಯಿಂದ 24 ಮಂದಿ ಮೃತಪಟ್ಟಿದ್ದರೆ, 658 ಮನೆಗಳು ಸಂಪೂರ್ಣ ನಾಶವಾಗಿವೆ. ಮನೆ ಸಂಪೂರ್ಣ ಹಾನಿಯಾದವರಿಗೆ ಮೊದಲ ಕಂತಿನ ಪರಿಹಾರ ತಲಾ ₹ 1 ಲಕ್ಷ ವಿತರಿಸಲು ತಕ್ಷಣ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಮತ್ತು ಈ ಸಂಬಂಧ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮಾಹಿತಿ ನೀಡಲಾಯಿತು.
ಸಭೆಯ ಮುಖ್ಯಾಂಶಗಳು
* ಕೃಷಿ ಇಲಾಖೆಯ ಎಲ್ಲ ಸ್ತರದ ಅಧಿಕಾರಿ ಹಾಗೂ ಸಿಬ್ಬಂದಿ ಮುಂದಿನ 15-20 ದಿನಗಳ ಕಾಲ ಸಂಪೂರ್ಣವಾಗಿ ಬೆಳೆ ಸಮೀಕ್ಷೆಯ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು.
* ಮನೆ ಹಾನಿ ವಿವರಗಳನ್ನು ತಂತ್ರಾಂಶದಲ್ಲಿ ಛಾಯಾಚಿತ್ರಗಳೊಂದಿಗೆ ಕೂಡಲೇ ದಾಖಲಿಸಬೇಕು. * ಆಯಾ ಜಿಲ್ಲೆಗಳ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸಬೇಕು.
* ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ವರದಿಯಾಗಿದೆ.
* ವಿಮಾ ಕಂಪನಿಗಳು ಸಹ ಬೆಳೆ ನಷ್ಟಕ್ಕೆ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ 3.43 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 1.5 ಲಕ್ಷ ರೈತರಿಗೆ ₹ 130 ಕೋಟಿ ಬಿಡುಗಡೆ ಮಾಡಲಾಗಿದೆ.
* ಉಳಿದ 79 ಸಾವಿರ ರೈತರಿಗೆ ಪರಿಹಾರ ನೀಡಲು ₹ 52 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು.
* ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಪರಿಹಾರ ಕಾರ್ಯಕ್ಕೆ ಪ್ರತಿ ವಲಯಕ್ಕೆ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ. ರಸ್ತೆ ಗುಂಡಿ ಮುಚ್ಚಲು ವಸ್ತುಸ್ಥಿತಿ ಆಧಾರಿತ ವರದಿಯನ್ನು ಕೂಡಲೇ ಸಲ್ಲಿಸಿ, ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು.
* ಮಾರಣಾಂತಿಕ ರಸ್ತೆ ಗುಂಡಿಗಳ ಬಳಿ ಬ್ಯಾರಿಕೇಡ್ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡಬೇಕು.
* ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ರಸ್ತೆ ಹಾನಿ ವರದಿ ಪಡೆದು, ಮಳೆ ಕಡಿಮೆಯಾದ ಕೂಡಲೇ ದುರಸ್ತಿಗೊಳಿಸಬೇಕು.
* ಸಂಚಾರ ಸಂಪರ್ಕ ಕಡಿತಗೊಂಡ ಸ್ಥಳಗಳನ್ನು ಆದ್ಯತೆ ಮೇರೆಗೆ ಸರಿಪಡಿಸಬೇಕು.
* ರಸ್ತೆಗಳ ದುರಸ್ತಿಗಾಗಿ ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ₹ 500 ಕೋಟಿ ಕೂಡಲೇ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಮುಖ್ಯಮಂತ್ರಿಗಳು ಆದೇಶಿಸಿದರು.
* ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಕೋಲಾರ ಸಂಸದ ಮುನಿಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Crop damage survey

























Discussion about this post