ಬೆಂಗಳೂರು: ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾಗಿಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ ಎಂದರು.
ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಬಿಗಿ
ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದರ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯ ಯಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದು ವಿವರಿಸಿದರು.
ಧಾರವಾಡ ಪ್ರಕರಣ-ತೀವ್ರತೆ ಕಡಿಮೆ
ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಹಲವರ ಪರೀಕ್ಷಾ ವರದಿ ಇನ್ನು ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.
ಎರಡನೇ ಡೋಸ್ ಪಡೆಯಿರಿ
ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೋನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದು ಹೇಳಿದರು.
ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು.
ಕೋವಿಡ್ ವೈರಸಿಗೆ 25 ರೂಪಾಂತರಿ
ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿವೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿವೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕು. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುವಿಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.
ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು ₹ 38 ಕೋಟಿಗಳನ್ನು ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ಸೋಂಕಿನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ನಲ್ಲಿಯೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಕೂಡ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದರು.
Covid’s mutant virus

























Discussion about this post