ನವದೆಹಲಿ: ತಮಿಳುನಾಡಿನ ಊಟಿ ಕೂನೂರ್ ಸಮೀಪದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿ ಮೃತಪಟ್ಟಿದ್ದು, ಈ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ 13 ಜನರಲ್ಲಿ ಭಾರತದ ಸೇನಾ ಜನರಲ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದ್ದಾರೆ ಎಂದು ಭಾರತೀಯ ವಾಯುಪಡೆ ಬುಧವಾರ ಸಂಜೆ ದೃಢಪಡಿಸಿದೆ.
“ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಜಿ ಅವರ ಅಕಾಲಿಕ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ದುಃಖಿತನಾಗಿದ್ದೇನೆ. ರಾಷ್ಟ್ರವು ತನ್ನ ವೀರ ಪುತ್ರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ. ಮಾತೃಭೂಮಿಗೆ ಅವರ ನಾಲ್ಕು ದಶಕಗಳ ನಿಸ್ವಾರ್ಥ ಸೇವೆಯು ಅಸಾಧಾರಣ ಶೌರ್ಯ ಮತ್ತು ವೀರತೆಯಿಂದ ಗುರುತಿಸಲ್ಪಟ್ಟಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪ,” ಎಂದು ರಾಷ್ಟ್ರಪತಿಗಳು ತಿಳಿಸಿದ್ದಾರೆ.
“ಹೆಲಿಕಾಪ್ಟರ್ ಅಪಘಾತದಲ್ಲಿನ ಜೀವಹಾನಿಯ ಕುರಿತು ತಿಳಿದುಕೊಂಡಾಗ ನನಗೆ ಅತೀವ ನೋವಾಗಿದೆ. ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ಸಾವನ್ನಪ್ಪಿದ ಪ್ರತಿಯೊಬ್ಬರಿಗೂ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ನಾನು ನಾಗರಿಕರೊಂದಿಗೆ ಸೇರಿಕೊಳ್ಳುತ್ತಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ” ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸಶಸ್ತ್ರ ಪಡೆಗಳ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಅವರು ಭಾರತಕ್ಕೆ ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದಾರೆ. ದುಃಖಿತ ಕುಟುಂಬಕ್ಕೆ ಸಂತಾಪಗಳು” ಎಂದಿದ್ದಾರೆ. ಇನ್ನೂ ಹಲವು ರಾಜಕೀಯ ಮತ್ತು ಇತರ ಕ್ಷೇತ್ರಗಳ ಗಣ್ಯರು ಜನರಲ್ ರಾವತ್ ಮತ್ತು ಇತರರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
Condolences from dignitaries including PM, President
Discussion about this post