ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಹಮ್ಮಿಕೊಂಡಿದ್ದ ದತ್ತಜಯಂತಿ ಅಂಗವಾಗಿ ಎರಡನೇ ದಿನವಾದ ಶನಿವಾರ ಮಧ್ಯಾಹ್ನ ದತ್ತಮಾಲಾಧಾರಿಗಳಿಂದ ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ.
ಮಧ್ಯಾಹ್ನ ೨.೩೦ಕ್ಕೆ ಇಲ್ಲಿನ ಶ್ರೀ ಕಾಮಧೇನು ದೇವಾಲಯದಿಂದ ಹೊರಡಲಿರುವ ಶೋಭಾಯಾತ್ರೆಯಲ್ಲಿ ಸುಮಾರು ಏಳೆಂಟು ಸಾವಿರ ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದ್ದರಿಂದ ಈ ಯಾತ್ರೆ ಸಂಚರಿಸುವ ಮಾರ್ಗಗಳಲ್ಲಿ ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
ಶೋಭಾಯಾತ್ರೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಗರ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿರುವ ಧಾರ್ಮಿಕ ಕೇಂದ್ರಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಶನಿವಾರ ಶೋಭಾ ಯಾತ್ರೆ ನಡೆಯಲಿದ್ದು ಮಧ್ಯಾಹ್ನ ೨.೩೦ ಗಂಟೆಗೆ ನಗರದ ಕಾಮಧೇನು ಗಣಪತಿ ದೇವಾಲಯದಿಂದ ಎಂ.ಜಿ ರಸ್ತೆ ಮೂಲಕ ಸಾಗಿ ಆಜದ್ ಪಾರ್ಕ್ವರೆಗೆ ಮೆರವಣಿಗೆ ಮೂಲಕ ಬೃಹತ್ ಶೋಭಾ ಯಾತ್ರೆ ನಡೆಯಲಿದೆ.
ಸಂಜೆ ೬ ಗಂಟೆಗೆ ಮಂಗಳೂರಿನ ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಆಲ್ದೂರಿನ ಬೇರುಗಂಡಿ ಮಠದ ರೇಣುಕಾ ಮಹಂತ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.
ವಿ.ಹಿಂ.ಪ.ನ ಅಖಿಲ ಭಾರತೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾಣುಮಾಲಯನ್ ದಿಕ್ಸೂಚಿ ಭಾಷಣ ಓದಲಿದ್ದು, ವಿ.ಹಿಂ.ಪ ಜಿಲ್ಲಾಧ್ಯಕ್ಷ ಶ್ರೀಕಾಂತ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಜರಂಗದಳ ಪ್ರಾಂತ ಸಂಯೋಜಕ ಕೆ.ಆರ್.ಸುನೀಲ್ ಭಾಗವಹಿಸಲಿದ್ದಾರೆ.
Shobha Yatra
Discussion about this post