ಚಿಕ್ಕಮಗಳೂರು: ಅಭಿವೃದ್ಧಿ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಯನ್ನು ಚುನಾವಣೆಗಳ ಮೂಲಕ ತೊಲಗಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ಸಲಹೆ ಮಾಡಿದರು.
ನಗರದ ಹಿರೇಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಶಾ ಸುರೇಶ್ ಪರವಾಗಿ ಮತಯಾಚಿಸಿದ ನಂತರ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಆಹಾರ ಪದಾರ್ಥಗಳ ಬೆಲೆಗಳು ಹಿಂದೆಂದೂ ಕಾಣದಷ್ಟು ಹೆಚ್ಚಳವಾಗಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವುದೇ ಜನಪರ ಕಾರ್ಯಗಳಿಗೆ ಒತ್ತು ನೀಡದ ಬಿಜೆಪಿ ಸರ್ಕಾರ ಕೇವಲ ಭಾವನಾತ್ಮಕ ವಿಚಾರಗಳ ಮೂಲಕ ರಾಜಕಾರಣ ಮಾಡುತ್ತಿರುವುದರ ಪರಿಣಾಮ ದೇಶದ ಐಕ್ಯತೆಗೆ ದಕ್ಕೆ ಬಂದಿದೆ ಎಂದು ವಿಷಾದಿಸಿದರು.
ಎಲ್ಲಿ ನೋಡಿದರು ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಇಲ್ಲಿನ ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಮರೆತು ಕೇವಲ ದತ್ತ ಜಯಂತಿ, ದತ್ತ ಪೀಠದಂತ ಭಾವನಾತ್ಮಕ ವಿಚಾರಗಳ ಮೂಲಕ ಬೆಂಕಿ ಹಚ್ಚಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಛೇಡಿಸಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಕಂಡ ಸಮ ಸಮಾಜದ ಕನಸು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದರು.
ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ರಾಜ್ಯದ ದೇಶದ ಅಭಿವೃದ್ಧಿಗೆ ಪೂರಕವಾಗಿ ಯಾವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಅವಕಾಶ ಜನರ ಮುಂದಿದೆ. ಬಿಜೆಪಿ ಎಂಬುದೇ ದೊಡ್ಡ ಮೊಸ. ದೇಶದಾದ್ಯಂತ ಅತ್ಯಾಚಾರ, ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ. ಚುನಾವಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಟಕವಾಡುತ್ತಾರೆ. ಅವರ ನಾಟಕಕ್ಕೆ ಮರುಳಾಗಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಕೆಪಿಸಿಸಿ ವೀಕ್ಷಕ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ನಗರಸಭೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ ನಗರದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ಶಾಸಕ ಸಿ.ಟಿ.ರವಿ ಅವರು ಅಭಿವೃದ್ಧಿಯತ್ತ ಗಮನಕೊಡದ ಕಾರಣದಿಂದ ರಸ್ತೆಗಳು ಗುಂಡಿ ಗೊಟರುಗಳಿಂದ ಕೂಡಿವೆ. ಚರಂಡಿಗಳು ಹದಗೆಟ್ಟಿವೆ. ಇಂತಹ ದುರಾಡಳಿತ ಕೊನೆಗಾಣಿಸಲು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ, ಭ್ರಷ್ಟಚಾರ ರಹಿತ, ಸ್ವಚ್ಛ ಆಡಳಿತಕ್ಕಾಗಿ ಈ ಬಾರಿ ಕಾಂಗ್ರೆಸ್ಗೆ ಮತ ನೀಡುವ ಮೂಲಕ ಬಿಜೆಪಿಯ ದುರಾಡಳಿತವನ್ನು ತೊಲಗಿಸಿ ಎಂದು ಸಲಹೆ ಮಾಡಿದರು.
ಕೆಪಿಸಿಸಿ ಮೀಡಿಯಾ ಛೇರ್ಮನ್ ಡಾ.ಬಿ.ಎಲ್.ಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಅಭ್ಯರ್ಥಿ ಆಶಾ ಸುರೇಶ್, ತರೀಕೆರೆ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಮುಖಂಡರಾದ ಎಚ್.ಎಚ್.ದೇವರಾಜ್, ದೋರನಾಳು ಪರಮೇಶ್, ಮೂಡಿಗೆರೆ ಶಿವು, ಎಚ್.ಪಿ.ಸುರೇಶ್, ಕಂಠ, ಸಿದ್ದೇಗೌಡ, ಸಿದ್ದೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ತರೀಕೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರ ಎಸಿ ಘಟಕ ಅಧ್ಯಕ್ಷ ಎಚ್.ಎಸ್.ಜಗದೀಶ್, ಜಿಲ್ಲಾ ಎಸ್ಸಿ ಘಟಕ ಪ್ರಧಾನ ಕಾರ್ಯದರ್ಶಿ ಎಚ್.ಎನ್.ಸುರೇಶ್, ಆಶ್ರಯ ಸಮಿತಿ ಮಾಜಿ ಸದಸ್ಯ ಎಚ್.ಟಿ.ವೆಂಕಟೇಶ್, ಎಚ್.ಆರ್.ಚಂದ್ರಪ್ಪ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಚ್.ಸಿ.ಗಂಗಾಧರ್ ಹಾಜರಿದ್ದರು.
Get rid of corrupt BJP
Discussion about this post