ಚಿಕ್ಕಮಗಳೂರು: ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಉಸ್ತುವಾರಿ ಸಮಿತಿಯ 3 ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನ್ಯಾಯಾಲಯದಲ್ಲಿ ಇದುವರೆಗೂ ದಾಖಲಾಗಿರುವ ಪ್ರಕರಣಗಳಲ್ಲಿ ೨೮೯ ಬಾಕಿ ಇದ್ದು, ಈ ಪ್ರಕಣಗಳಿಗೆ ಸಂಬಂಧಿಸಿದ ಸಾಕ್ಷಿ ಹಾಗೂ ಪೂರಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಇದಕ್ಕೆ ಸಂಬಂಧ ಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ ನೊಂದಿರುವ ಈ ಜನರಿಗೆ ನ್ಯಾಯ ದೊರಕಿಸಿ ನೆಮ್ಮದಿಯ ಜೀವನ ನಡೆಸಲು ಕ್ರಮ ಕೈಗೊಳ್ಳಬೇಕು ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿನ ನೊಂದ ಸಂತ್ರಸ್ಥರಿಗೆ ವಿಳಂಭವಿಲ್ಲದೆ ಪರಿಹಾರಧನ ವಿತರಿಸಬೇಕು ಎಂದರು.
ಜಿಲ್ಲೆಯ ಹಲವೆಡೆ ಪರಿಶಿಷ್ಟ ಜಾತಿಯ ಜಮೀನುಗಳನ್ನು ಅತಿಕ್ರಮಿಸಿ ಬೇರೆಯವರಿಗೆ ಪೌತಿ ಖಾತೆ ಮಾಡಿರುವ ಪ್ರಕರಣಗಳನ್ನು ಸಮಿತಿ ಸದಸ್ಯರುಗಳು ಸಭೆಯ ಗಮನಕ್ಕೆ ತಂದಾಗ ಇದಕ್ಕೆ ಜಿಲ್ಲಾಧಿಕಾರಿಗಳು ಸ್ಪಂಧಿಸಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ/ಪಂಗಡದ ಜನರಿಗೆ ದೌರ್ಜನ್ಯ ಮತ್ತಿತರ ಸಮಸ್ಯೆಗಳು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಾಗೂ ಜಿಲ್ಲೆಯಲ್ಲಿ ಪೌತಿ ಖಾತೆ ಆಗಿರುವ ಬಗ್ಗೆ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಿಸಿ ವರದಿ ತರಿಸಿಕೊಂಡು ನ್ಯಾಯ ಒದಗಿಸುವ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಡಾ||ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭವನಗಳನ್ನು ನಿರ್ಮಿಸುತ್ತಿದ್ದು, ಏಜೆನ್ಸಿಗಳು ನಿಗಧಿತ ವೇಳೆಯಲ್ಲಿ ಎಲ್ಲಾ ಭವನಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಜಾಗದ ಸಮಸ್ಯೆಗಳಿರುವ ಸ್ಥಳಗಳ ಮಾಹಿತಿ ಸಂಬಂಧಿಸಿದ ಅಧಿಕಾರಿಗಳಿಗೆ ೨ ವಾರಗಳಲ್ಲಿ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಭವನಗಳನ್ನು ನಿರ್ಮಿಸಲು ಮುಂದಾಗಬೇಕು ಎಂದು ಹೇಳಿದರು.
ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಇದೇ ಡಿಸೆಂಬರ್ ೩೧ ರ ಒಳಗೆ ಜಿಲ್ಲೆಯಲ್ಲಿ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಗಳಲ್ಲಿ ಉಂಟಾಗಿರುವ ಒತ್ತುವರಿ ಸಮಸ್ಯೆ ನಿವಾರಿಸಲು ಕ್ರಮಗೊಂಡು ಪರಿಶಿಷ್ಟ ಜಾತಿ/ಪಂಗಡದವರಿಗೆ ನಿವೇಶನ ನೀಡುವಂತೆ ತಿಳಿಸಿದರು. ಜಾತಿ ಪ್ರಮಾಣ ಪತ್ರ ಮತ್ತು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಪ್ರತಿಕ್ರಿಯಿಸಿದ ಸದಸ್ಯರುಗಳು ಇದಕ್ಕೆ ಕಟ್ಟು ನಿಟ್ಟಿನ ಕ್ರಮ ಹಾಗೂ ದಾಳಿಗಳನ್ನು ಮಾಡಿ ನಿಯಂತ್ರಣ ಮಾಡುವಂತೆ ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಉಪವಿಭಾಗಧಿಕಾರಿ ನಾಗರಾಜ್, ಸಮಾಜ ಕಲ್ಯಾಣಾಧಿಕಾರಿ ಬಿ.ವಿ.ಚೈತ್ರ ಸೇರಿದಂತೆ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
Atrocities
Discussion about this post