ನವದೆಹಲಿ: ಉತ್ತಮ ಫಾರ್ಮ್ನಲ್ಲಿರುವ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ತಂಡಕ್ಕೆ ಆಯ್ಕೆ ಮಾಡಿರುವುದನ್ನು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.
ಗಾಯಕ್ವಾಡ್ ಅವರು ಅದ್ಭುತ ಬ್ಯಾಟರ್. ಭಾರತ ತಂಡಕ್ಕೆ ಅದ್ಭುತಗಳನ್ನು ಸಾಧಿಸಿ ಕೊಡಬಲ್ಲ ಸಾಮರ್ಥ್ಯ ಅವರಲ್ಲಿದೆ ಎಂದು ಚೇತನ್ ಶರ್ಮಾ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ತಂಡವನ್ನು ಶುಕ್ರವಾರ ಬಿಸಿಸಿಐ ಪ್ರಕಟಿಸಿತ್ತು. ಜನವರಿ 19, 21 ಹಾಗೂ 23 ರಂದು ಪಂದ್ಯಗಳು ನಡೆಯಲಿವೆ.
ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್ ನಾಯಕ
ಗಾಯಕ್ವಾಡ್ ಅವರಿಗೆ ಸರಿಯಾದ ಸಮಯದಲ್ಲಿ ಅವಕಾಶ ನೀಡಲಾಗಿದೆ. ಅವರು ನ್ಯೂಜಿಲೆಂಡ್ ವಿರುದ್ಧ ಇತ್ತೀಚೆಗೆ ನಡೆದ ಟ್ವೆಂಟಿ-20 ಸರಣಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದರು. ಈಗ ಏಕದಿನ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರು ತಂಡಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದು ತಂಡದ ಆಟಗಾರರ ಪಟ್ಟಿ ಪ್ರಕಟಿಸಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಚೇತನ್ ಶರ್ಮಾ ಹೇಳಿದ್ದಾರೆ.
ಮಹಾರಾಷ್ಟ್ರದ ಪುಣೆಯವರಾಗಿರುವ ಋತುರಾಜ್ ಗಾಯಕ್ವಾಡ್ಗೆ ಈಗ 24 ವರ್ಷ ವಯಸ್ಸು. 2021ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಯೂ ಇವರದ್ದಾಗಿದೆ.
‘ನಾವು ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದೇವೆ. ಅವರನ್ನು ಆಡುವ 11ರ ಬಳಗದಲ್ಲಿ ಸೇರಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬುದು ತಂಡದ ಆಡಳಿತ ಮಂಡಳಿಗೆ ಬಿಟ್ಟ ವಿಚಾರ. ಸಂದರ್ಭನುಸಾರ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ: India vs South Africa Test: ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನ ನಗು ಬೀರಿದ ಭಾರತ
Discussion about this post