ಚಿಕ್ಕಮಗಳೂರು: ನವೆಂಬರ್ ೧೪ ರಂದು ಶ್ರೀರಾಮಸೇನೆ ವತಿಯಿಂದ ನಡೆಯಲಿರುವ ದತ್ತಮಾಲಾ ಅಭಿಯಾನ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್-೧೯ ಹಿನ್ನಲೆಯಲ್ಲಿ ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಶ್ರೀರಾಮ ಸೇನೆ ಕಾರ್ಯಕರ್ತರಿಗೆ ತಿಳಿಸಿದರು.
ತಮ್ಮ ಕಛೇರಿ ಸಭಾಂಗಣದಲ್ಲಿ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ಶ್ರೀ ರಾಮ ಸೇನೆ ಕಾರ್ಯಕರ್ತರು ಆಗಮಿಸುವ ಹಿನ್ನಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊರೋನಾ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಈ ಬಾರಿ ಕನಿಷ್ಠ ೪೦೦ ಜನ ಸೇರಲು ಅವಕಾಶವಿದ್ದು, ದತ್ತಮಾಲೆಯಲ್ಲಿ ಭಾಗವಹಿಸುವ ಎಲ್ಲರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವಂತೆ ತಿಳಿಸಿದ ಅವರು ಮೆರವಣಿಗೆ, ಶೋಭಾಯಾತ್ರೆಗೆ ಅವಕಾಶ ಇರುವುದಿಲ್ಲ ಎಂದ ಅವರು ಬೆಟ್ಟಕ್ಕೆ ದೊಡ್ಡ ಚಾರ್ಸಿಯ ಬಸ್ಗಳಲ್ಲಿ ತೆರಳಲು ಅವಕಾಶವಿರುವುದಿಲ್ಲ. ಲಘು ವಾಹನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತೆರಳುವಂತೆ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್ ಅವರು ಮಾತನಾಡಿ, ಯಾವ ವಾಹನಗಳಲ್ಲಿ ಬೆಟ್ಟಕ್ಕೆ ತೆರಳುವ ಬಗ್ಗೆ ಅನುಮತಿ ಪಾಸ್ ಪಡೆಯಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್ ಹಾಕಲು ಅವಕಾಶವಿರುವುದಿಲ್ಲ ಎಂದ ಅವರು ನಗರಸಭೆ ಆಯುಕ್ತರು ಸೂಚಿಸಿದ ೫ ಕಡೆ ಬ್ಯಾನರ್ ಕಟ್ಟಲು ಅವಕಾಶ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ದಿನವಾದ ನವೆಂಬರ್ ೧೪ ರಂದು ದತ್ತಪೀಠಕ್ಕೆ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದ್ದು, ಪ್ರವಾಸಿಗರು ಅಂದು ಬಾಬಾ ಬುಡನ್ಗಿರಿಗೆ ಆಗಮಿಸದಂತೆ ಮನವಿ ಮಾಡಿದ ಜಿಲ್ಲಾಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಶ್ರೀರಾಮ ಸೇನೆ ಕಾರ್ಯಕರ್ತರಿಗೆ ತಿಳಿಸಿದರು.
ಬೆಟ್ಟದಲ್ಲಿ ನವೆಂಬರ್ ೧೪ ರಂದು ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ ಹಾಗೂ ಅಂಬುಲೆನ್ಸ್ ಗಳೊಂದಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ, ತಾತ್ಕಾಲಿಕ ಆಸ್ಪತ್ರೆಯ ಆವರಣಕ್ಕೆ ಸುಣ್ಣ-ಬಣ್ಣ ಬಳಿಯುವುದು ಅವಶ್ಯವಿರುವ ಕಡೆ ಬ್ಯಾರಿಕೇಡ್ಗಳನ್ನು ಹಾಕುವುದಲ್ಲದೆ ಸಿ.ಸಿ.ಟಿವಿ ದುರಸ್ಥಿಯಲ್ಲಿದ್ದರೇ ದುರಸ್ಥಿಗೊಳಿಸಿ ಅವಶ್ಯವಿರುವ ಕಾಮಗಾರಿ ನಿರ್ವಹಣೆ ಮಾಡುವಂತೆ ನಿರ್ಮಿತಿ ಕೇಂದ್ರಕ್ಕೆ, ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಕಾರ್ಯಪಾಲಕ ಅಭಿಯಂತರರಿಗೆ, ಗಾಳಿಕೆರೆ ಹಾಗೂ ಮಾಣಿಕ್ಯಧಾರಕ್ಕೆ ತೆರಳುವ ರಸ್ತೆ ದುರಸ್ಥಿಪಡಿಸುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ನಗರಸಭೆ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಹೆಚ್ ಎಲ್ ನಾಗರಾಜು, ಪ್ರಾದೇಶಿಕ ಸಾರಿಗೆ ಉಪನಿರ್ದೇಶಕ ಮುರುಗೇಂದ್ರ ಶಿರೋಳ್ಕರ್, ಶ್ರೀರಾಮ ಸೇನೆ ಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Dattamale Campaign: ಜಿಲ್ಲೆಯಲ್ಲಿ ನ.8 ರಿಂದ 14ವರೆಗೆ ಶ್ರೀರಾಮಸೇನೆ ದತ್ತಮಾಲೆ ಅಭಿಯಾನ

























Discussion about this post