ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಡಿ.10 ರಂದು ನಡೆಯುವ ಚುನಾವಣೆಯಲ್ಲಿ ಯಾರ ಪರವಾಗಿ ಮತ ಚಲಾಯಿಸಬೇಕು ಎನ್ನುವುದನ್ನು ಜಿಲ್ಲೆಯ ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರು ಹಾಗೂ ಪಕ್ಷದಿಂದ ಗೆದ್ದಿರುವ ಇತರೆ ಸ್ಥಳೀಯ ಸಂಸ್ಥೆ ಸದಸ್ಯರ ವಿವೇಚನೆಗೆ ಬಿಡಲಾಗಿದೆ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ಹೊಲದ ಗದ್ದೆ ಗಿರೀಶ್ ಸ್ಪಷ್ಟಪಡಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕದಿರುವ ಕ್ಷೇತ್ರಗಳಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ವಿಚಾರದಲ್ಲಿ ಜಿಲ್ಲಾ ಮಟ್ಟದ ಸ್ಥಳೀಯ ನಾಯಕರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪಕ್ಷದ ವರಿಷ್ಠ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದರ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾ.ಪಂ.ಸದಸ್ಯರ ಮತಗಳ ಮೌಲ್ಯವು ಶಾಸಕರ ಮತದ ಮೌಲ್ಯಕ್ಕೆ ಸಮನಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ತಾವೇ ಆಯ್ಕೆ ಮಾಡಿಕೊಳ್ಳಬೇಕು ಎಂದು ಪಕ್ಷ ಬೆಂಬಲಿತ ಸದಸ್ಯರಲ್ಲಿ ಅವರು ಮನವಿ ಮಾಡಿದ್ದಾರೆ.
ರಾಜ್ಯದ ೬ ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಅಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಎಲ್ಲಾ ೩೫ ವಾರ್ಡುಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಈ ಗಾಗಲೇ ವಿಧಾನ ಪರಿಷತ್ ಸದಸ್ಯರೂ, ಪಕ್ಷದ ಮುಖಂಡರಾದ ಎಸ್.ಎಲ್.ಬೋಜೇಗೌಡ ಅವರು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಬೋಜೇಗೌಡ ಅವರ ನೇತೃತ್ವದಲ್ಲಿ ಒಂದು ಸುತ್ತಿನ ನಗರ ಸಮಿತಿ ಸಭೆ ನಡೆಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆಯಾ ವಾರ್ಡ್ಗಳಲ್ಲಿ ಪಕ್ಷದಿಂದ ಸ್ಪರ್ಧಿಸಬಯಸಿರುವ ಆಕಾಂಕ್ಷಿಗಳು ಚುನಾವಣೆಗೆ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ನಗರಸಭೆಯಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದಿವೆ. ಸಮಸ್ಯೆಗಳಿಗೆ ಸ್ಪಂದಿಸುವವರು ಇಲ್ಲದೆ ಜನತೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ದಕ್ಷ ಹಾಗೂ ಪ್ರಾಮಾಣಿಕ ಆಡಳಿತ ನೀಡುವವರನ್ನು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಾತ್ಯತೀತ ಪಕ್ಷಗಳು ಒಂದಾಗಿ ಹೊಂದಾಣಿಕೆ ಮೇಲೆ ಚುನಾವಣೆ ಎದುರಿಸುವ ಮೂಲಕ ಜನವಿರೋಧಿ ಬಿಜೆಪಿಯನ್ನು ನಗರಸಭೆಯಲ್ಲಿ ಅಧಿಕಾರದಿಂದ ದೂರ ಇಡಬೇಕಿದೆ. ಹೊಂದಾಣಿಕೆ ವಿಚಾರದಲ್ಲಿ ಜೆಡಿಎಸ್ ಮುಕ್ತವಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಎಷ್ಟು ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ಕುರಿತು ಎಸ್.ಎಲ್.ಬೋಜೇಗೌಡ, ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸೇರಿದಂತೆ ಇತರೆ ಮುಖಂಡರು ಸಭೆ ಸೇರಿ ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
District JD(S) spokesperson
Discussion about this post