ಚಿಕ್ಕಮಗಳೂರು: ಬೆಲೆ ಏರಿಕೆ, ಕೃಷಿ ವಿರೋಧಿ ನೀತಿ, ಜನ ವಿರೋಧಿ ನೀತಿ, ಸ್ಥಳೀಯ ಸಂಸ್ಥೆಗಳ ಅಧಿಕಾರ ವಿಕೇಂದ್ರೀಕರಣ ವಿರೋಧಿ ನೀತಿ ಅನುಸರಿಸುತ್ತಿರುವುದು, ವಿಧಾನ ಪರಿಷತ್ ಹಾಲಿ ಸದಸ್ಯರಿಂದ ಸ್ಥಳೀಯ ಸಂಸ್ಥೆಗಳ ಕಡೆಗಣನೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ದುರಾಡಳಿತದಿಂದ ಬೇಸತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಒಲವು ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರ ಪರ ಜಿಲ್ಲೆಯಾದ್ಯಂತ ವ್ಯಕ್ತವಾಗುತ್ತಿದ್ದು, ಗೆಲುವು ನಿಶ್ಚಿತ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಹೇಳಿದ್ದಾರೆ.
ಹೇಳಿಕೆ ನೀಡಿರುವ ಅವರು, ಕೇಂದ್ರದಲ್ಲಿ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳು ನಿರಂತರ ಚಟುವಟಿಕೆಗಳಿಂದ ಕೂಡಿರಬೇಕು ಎಂಬ ಕಾರಣದಿಂದ ಜಾರಿಗೊಳಿಸಿದ್ದ ಮಹತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೂ ಇಂದು ಕೇಂದ್ರ ಸರ್ಕಾರ ತಿಲಾಂಜಲಿ ಇಟ್ಟಿದ್ದು, ಸ್ಥಳೀಯ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಲು ಕಾರಣವಾಗಿದೆ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳನ್ನು ಸದೃಢಗೊಳಿಸುವ ಮತ್ತು ಹೆಚ್ಚಿನ ಅಧಿಕಾರವನ್ನು ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದ ಪಂಚಾಯತ್ ಸಂಸ್ಥೆಗಳ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ವಿರೋಧಿಸಿದ್ದ ಬಿಜೆಪಿ ಇಂದು ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ನಿರಂತರವಾಗಿ ಹಸ್ತಕ್ಷೇಪ ನಡೆಸಿಕೊಂಡು ಬರುತ್ತಿದೆ. ಈ ಎಲ್ಲಾ ಸತ್ಯಸಂಗತಿಗಳನ್ನು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ತಿಳಿದುಕೊಂದು ಕಾಂಗ್ರೆಸ್ ಪರವಾಗಿ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಂದಿನಿಂದ ಇಂದಿನವರೆಗೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ನಿರಂತರ ಏರಿಕೆಯಾಗುತ್ತಿರುವುದರಿಂದ ಆಹಾರ ಧಾನ್ಯಗಳು, ಅಡುಗೆ ಎಣ್ಣೆ ಬೆಲೆಗಳು ಗಗನಮುಖಿಯಾಗಿ ಜನರ ಬದುಕು ದುಸ್ತರವಾಗಿದೆ. ಕೃಷಿಕರು ಬಳಸುವ ರಸಗೊಬ್ಬರ, ಉಪಕರಣಗಳ ಬೆಲೆಗಳು ಹೆಚ್ಚಳವಾಗಿವೆ. ಸಿಮೆಂಟ್, ಕಬ್ಬಿಣ ಸೇರಿದಂತೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಬೆಲೆಗಳು ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ನಿರ್ಮಾಣ ಕಾಮಗಾರಿಗಳು ಕುಂಠಿತಗೊಳ್ಳಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ದಿನದಿಂದ ದಿನಕ್ಕೆ ವ್ಯವಸಾಯ ಪದ್ಧತಿಯಿಂದ ರೈತರು ವಿಮುಖರಾಗುತ್ತಿದ್ದಾರೆ. ರೈತ ವಿರೋಧಿ ನೀತಿಗಳ ಮೂಲಕ ಕೃಷಿ ಕ್ಷೇತ್ರವನ್ನು ಬಂಡವಾಳ ಶಾಹಿಗಳಿಗೆ ಒಪ್ಪಿಸಲು ನಡೆಸಿರುವ ಹುನ್ನಾರದಿಂದ ಈಗಾಗಲೇ ರೈತಾಪಿ ವರ್ಗ ಸ್ವತಂತ್ರ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ತೀವ್ರ ಸಂಕಷ್ಟವನ್ನು ಎದುರಿಸುತ್ತಿದೆ.
ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನಡೆಸಿದ ರೈತರು ತಮ್ಮ ಜೀವವನ್ನೇ ಕಳೆದುಕೊಳ್ಳಲು ಕೇಂದ್ರ ಸರ್ಕಾರ ಕಾರಣವಾಗಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಸತ್ಯವನ್ನು ರೈತರು ತಿಳಿದುಕೊಂಡಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತರು ತಮ್ಮ ನಿಲುವನ್ನು ಈ ಬಾರಿ ಬದಲಿಸಿಕೊಂಡು ಕಾಂಗ್ರೆಸ್ ಪರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದಿದ್ದಾರೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿ ಹೋಗಿದ್ದ ಹಾಲಿ ಬಿಜೆಪಿ ಶಾಸಕರು ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿದ್ದು, ಯಾವುದೇ ಜನಪರ ಕಾರ್ಯಗಳನ್ನು ನಡೆಸದಿರುವುದು ಮತ್ತು ಸ್ಥಳೀಯ ಸಂಸ್ಥೆಗಳ ಸಂಪರ್ಕವನ್ನು ಸಾಧಿಸದಿರುವುದು ಜಿಲ್ಲೆಯ ನಿರ್ಲಕ್ಷ್ಯಕ್ಕೆ ಕಾರಣವಾಗಿರುವುದನ್ನು ಜನರು ಮನಗಂಡಿದ್ದು, ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಈ ಎಲ್ಲಾ ವಿಚಾರಗಳನ್ನು ಮನಗಂಡಿರುವ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಒಲವು ಕಾಂಗ್ರೆಸ್ ಪರ ಜಿಲ್ಲೆಯಾದ್ಯಂತ ವ್ಯಕ್ತವಾಗಿದ್ದು, ಈ ಹಿಂದೆ ವಿಧಾನ ಪರಿಷತ್ ಶಾಸಕಿಯಾಗಿ ಗಾಯತ್ರಿ ಶಾಂತೇಗೌಡ ಅವರು ಮಾಡಿರುವ ಜನಪರ ಕಾರ್ಯಗಳು, ಸ್ಥಳೀಯ ಸಂಸ್ಥೆಗಳೊಂದಿಗಿನ ನಿರಂತರ ಸಂಪರ್ಕ, ಸಮಸ್ಯೆಗಳ ಪರಿಹಾರಕ್ಕೆ ನಡೆಸಿರುವ ಯತ್ನಗಳು, ಅಭಿವೃದ್ಧಿ ಪರವಾದ ಕಾಳಜಿಯನ್ನು ತಿಳಿದುಕೊಂಡಿರುವುದರಿಂದ ಅವರನ್ನು ಗೆಲ್ಲಿಸಲು ತೀರ್ಮಾನಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗಾಯತ್ರಿ ಶಾಂತೇಗೌಡ ಜಯ ಗಳಿಸುವುದು ನಿಶ್ಚಿತ ಎಂದಿದ್ದಾರೆ.
Hiremagalur Puttaswamy
Discussion about this post