ಚಿಕ್ಕಮಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಟೀಕಿಸಿ. ಜಾತಿ, ಧರ್ಮವನ್ನು ಎತ್ತಿಕಟ್ಟುವ ಮೂದಲಿಕೆ ಹೇಳಿಕೆಗಳನ್ನು ನೀಡದೆ ತಮ್ಮ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೊದಲು ವಿಮರ್ಶೆ ಮಾಡಿಕೊಳ್ಳಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ಕುಟುಕಿದರು.
ವಿಧಾನ ಪರಿಷತ್ ಚುನಾವಣೆ ಸಂಬಂಧ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯದ ೨೦ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಸಂವಿಧಾನದ ಸಾಮಾಜಿಕ ನ್ಯಾಯದ ಪರಿಕಲ್ಪನೆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ, ಪಂಗಡ, ಮಹಿಳೆಯರು, ಯುವಕರು, ಸಾಮಾನ್ಯ ವರ್ಗ ಸೇರಿದಂತೆ ಎಲ್ಲಾ ಪಂಗಡಕ್ಕೂ ಸಮಾನ ಅವಕಾಶ ನೀಡಲಾಗಿದೆ. ಬಿಜೆಪಿ ಕೇವಲ ತೋರಿಕೆಗೆ ಮಾತ್ರ ಸಾಮಾಜಿಕ ನ್ಯಾಯದ ಪ್ರತಿಪಾದನೆ ಮಾಡುತ್ತದೆ ಎಂದು ಟೀಕಿಸಿದರು.
ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜತೆಗೆ ಅಧಿಕಾರ ವಿಕೇಂದ್ರಿಕರಣ ನೀತಿ ಜಾರಿಗೊಳಿಸಿದ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದಾಗ ಬಿಜೆಪಿ ಅಪಹಾಸ್ಯ ಮಾಡಿತ್ತು ಆದರೆ ಅದೇ ನರೇಗಾ ಯೋಜನೆ ಲಾಕ್ಡೌನ್ ಸಮಯದಲ್ಲಿ ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿದೆ, ಮೀಸಲಾತಿ ಪರಿಕಲ್ಪನೆ ಜತೆಗೆ ಸಮಾನತೆಯನ್ನು ತಂದಿದ್ದು ಇದೇ ಕಾಂಗ್ರೆಸ್ ಪಕ್ಷ ಎಂದರು.
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಜತೆಗೆ ಅಧಿಕಾರ ವಿಕೇಂದ್ರಿಕರಣ ನೀತಿಯನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೆ ಅಧಿಕಾರ ಸಿಕ್ಕಿ ೩ ವರ್ಷ ಕಳೆದರೂ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲಾಗದೆ. ಧರ್ಮ, ಜಾತಿಯ ಹೆಸರಲ್ಲಿ ಕಾಂಗ್ರೆಸ್ ನಾಯಕರನ್ನು ಟೀಕಿಸುತ್ತಾ ಮೂದಲಿಕೆ ಮಾತುಗಳಿಂದ ಕಾಲಕಳೆಯುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಾಗಿ ರಾಜ್ಯಕ್ಕೆ ಅವರ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಲಿ. ಅವರ ಆವೇಶದ ಮಾತುಗಳು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಅಂತಾ ಟೀಕಿಸಿದರು.
ಸರ್ಕಾರ ಕಾಮಗಾರಿಗಳಿಗೆ ೪೦ ಪರ್ಸೆಂಟ್ ಕಮಿಷನ್ ಪಡೆಯುತ್ತಾರೆ ಎಂದು ಆರೋಪಿಸಿ ರಾಜ್ಯ ಗುತ್ತಿಗೆದಾರರ ಸಂಘ ಪ್ರಧಾನಮಂತ್ರಿಗಳಿಗೆ ದೂರು ನೀಡಿದೆ. ಪಂಚಾಯತ್ ರಾಜ್ಯ ವ್ಯವಸ್ಥೆ ಬಲಪಡಿಸಲಾಗುತ್ತಿದೆ ಎನ್ನುವ ಸಚಿವ ಈಶ್ವರಪ್ಪನವರು ಇದುವರೆಗೂ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ಯಾಕೆ ನಡೆಸಿಲ್ಲ? ಎಂದು ಪ್ರಶ್ನಿಸಿದ ಅವರು ತಮ್ಮ ಇಲಾಖೆಯ ಅನುದಾನ ಹಂಚಿಕೆಯಲ್ಲಿ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ದೂಷಿಸಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದು ನೀವಲ್ಲವೇ,? ಇದೀಗ ಕಾಂಗ್ರೆಸ್ ನಾಯಕರನ್ನು ಟೀಕಿಸುವ ನೈತಿಕತೆ ನಿಮಗಿದೇಯಾ ಎಂದು ವಾಗ್ದಾಳಿ ನಡೆಸಿದರು.
ಜಿಲ್ಲೆಯ ಸಂಸದರು, ಕೇಂದ್ರ ರಾಜ್ಯ ಕೃಷಿ ಸಚಿವರು ಶೋಭಾ ಕರಂದ್ಲಾಜೆ ರೈತರ ಪರವಾಗಿದ್ದೇವೆ ಎಂದು ಹೇಳಿಕೆ ನೀಡುತ್ತಾರೆ ಆದರೆ ರಸಗೊಬ್ಬರ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದಾರೆ ಜತೆಗೆ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಬೆಳೆವಿಮೆ ಇನ್ನೂ ಪಾವತಿಯಾಗಿಲ್ಲ, ಸಕಾಲಕ್ಕೆ ಕೇಂದ್ರದ ದಿಶಾ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳನ್ನು ಆಲಿಸಿಲ್ಲ, ಧರ್ಮದ ಬಗ್ಗೆ ಉದ್ದುದ್ದ ಭಾಷಣ ಮಾಡುವುದಲ್ಲ ಬದಲಾಗಿ ೨ ಬಾರಿ ಸಂಸದರಾಗಿ ಜಿಲ್ಲೆಗೆ ಏನು ಕೊಡುಗೆ ನೀಡಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಡಬಲ್ ಇಂಜಿನ್ ಸರ್ಕಾರವಿದ್ದರು ಜಿಲ್ಲೆ ಅಭಿವೃದ್ಧಿಯಲ್ಲಿ ಶೂನ್ಯ ಫಲಿತಾಂಶ ಕಂಡಿದೆ. ಸ್ಥಳೀಯ ಶಾಸಕ ಸಿ.ಟಿ ರವಿ ನೆಹರೂ, ಇಂದಿರಾಗಾಂಧಿಯವರ ಟೀಕಿಸಿ ಮೂದಲಿಕೆ ಮಾತುಗಳನ್ನಾಡುತ್ತಾ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರ ಎಂದು ಗುತ್ತಿಗೆದಾರರೇ ಪ್ರಧಾನಿಗೆ ಪತ್ರ ಬರೆಯುತ್ತಾರೆ, ಜಿಲ್ಲೆಯಲ್ಲಿನ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚಕಾರವೆತ್ತಲ್ಲ ಎಂದು ಶಾಸಕರ ವಿರುದ್ದ ಗುಡುಗಿದರು.
ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಗ್ರಾಮಪಂಚಾಯಿತಿ ಸದಸ್ಯರಿಗೆ ಗೌರವಧನ ಹೆಚ್ಚಳ ಮಾಡುವುದಾಗಿ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ, ಅಧಿಕಾರದಲ್ಲಿದ್ದಾಗ ಮಾಡದೆ ಇರುವುದನ್ನು ಚುನಾವಣೆ ಸಂದರ್ಭದಲ್ಲಿ ಹೇಳಿಕೆ ನೀಡುವ ಅವಶ್ಯಕತೆ ಏನಿದೆ? ಇದು ಚುನಾವಣಾ ಸಂಹಿತೆ ಉಲ್ಲಂಘನೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಈಗಾಗಲೇ ಬಿಜೆಪಿ ಆಡಳಿತ ವೈಫಲ್ಯಕ್ಕೆ ಈಗಾಗಲೇ ಜನ ರೋಸಿಹೋಗಿದ್ದಾರೆ ದೇಶದಲ್ಲಿ ಬಿಜೆಪಿಗೆ ಅಧಿಕಾರದಲ್ಲಿ ಒಲವಿದೆ ವಿನಃ, ಅಭಿವೃದ್ಧಿಯಲ್ಲಿ ಒಲವಿಲ್ಲ ಎಂದು ದೂಷಿಸಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಒಮ್ಮತದ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಅವರನ್ನು ಪರಿಷತ್ ಚುನಾವಣಾ ಕಣಕ್ಕೆ ಇಳಿಸಿದ್ದು ಎಲ್ಲರೂ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಪಿ.ಅಂಶುಮಂತ್, ಉಪಾಧ್ಯಕ್ಷ ವೆಂಕಟೇಶ್ನಾಯ್ಡು, ಕಾಂಗ್ರೆಸ್ ವಕ್ತಾರ ಹಿರೇಮಗಳೂರುಪುಟ್ಟಸ್ವಾಮಿ, ರೂಬೆನ್ಮೊಸಸ್, ಜಿ.ಪಂ. ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಶಿವಾನಂದಸ್ವಾಮಿ, ಡಾ.ವಿಜಯ್ಕುಮಾರ್ ಉಪಸ್ಥಿತರಿದ್ದರು.
Let BJP leaders leave taunts and review development
Discussion about this post