ಚಿಕ್ಕಮಗಳೂರು : ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವ ಮೂಲಕ ರಾಜ್ಯದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷವನ್ನು ರಾಜಕೀಯವಾಗಿ ಹಾಗೂ ಸಂಘಟನಾತ್ಮಕವಾಗಿ ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ರಾಷ್ಟೀಯ ಕಾರ್ಯದರ್ಶಿ ಕಾಂ. ಬಿನೋಯ್ ವಿಶ್ವಂ ನೇತೃತ್ವದಲ್ಲಿ ನಡೆದ ರಾಜ್ಯ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು.
ದೇಶದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ, ಬದಲಾಗಿ ಕಾರ್ಪೋರೇಟ್ ಸ್ನೇಹಿ ಆಡಳಿತ ನಡೆಸುತ್ತಿದ್ದು ದೇಶದ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ದೇಶದಲ್ಲಿ ಬಡತನಮ ನಿರುದ್ಯೋಗ, ರೈತರು, ಕಾರ್ಮಿಕರ ಸಮಸ್ಯೆಗಳು ಹೆಚ್ಚಿದ್ದು ಸರ್ಕಾರ ಸ್ಪಂದಿಸದೆ ಭಂಡತನವನ್ನು ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಕಳೆದ ಒಂದು ವರ್ಷದಿಂದ ಕರಾಳ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತರು ಸುದೀರ್ಘವಾದ ಹೋರಾಟ ನಡೆಸುತ್ತಿದ್ದಾರೆ, ಆದರೆ ಸರ್ಕಾರ ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದೆ. ಸರ್ಕಾರದ ನಡೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಶಿಥಿಲಗೊಳಿಸುವ ಹುನ್ನಾರ, ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ನಿರ್ಧರಿಸಬೇಕಿದೆ ಎಂದರು.
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದ ೧೨ ಜಿಲ್ಲೆಗಳಲ್ಲಿ ೨೫ ಕ್ಷೇತ್ರಗಳಿಂದ ಪಕ್ಷ ಸ್ಪರ್ಧಿಸಲಿದೆ. ಮುಖ್ಯವಾಗಿ ಜಿಲ್ಲೆಯ ಮೂಡಿಗೆರೆ ಹಾಗೂ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದು ಸಂಘಟನಾತ್ಮಕವಾಗಿ ಚುನಾವಣಾ ಪೂರ್ವ ಸಿದ್ದತೆ ಬಗ್ಗೆ ಚರ್ಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಅತಿವೃಷ್ಟಿಯ ಕಾರಣ ಕಾಫಿ, ಅಡಕೆ ಸೇರಿದಂತೆ ಅನೇಕ ಬೆಳೆಗಳ ಹಾನಿ ನಷ್ಟದಿಂದಾಗಿ ರೈತರು, ಬೆಳೆಗಾರರು ಕಂಗಲಾಗಿದ್ದಾರೆ. ಸರ್ಕಾರ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪಡಿಹಾರ ನೀಡಬೇಕು, ಕೋವಿಡ್ ಲಸಿಕೆ ಪಡೆಯಲು ಮನವೊಲಿಸಬೇಕು ಬದಲಾಗಿ ಸರ್ಕಾರಿ ಸೌಲಭ್ಯಗಳನ್ನು ತಡೆಹಿಡಿಯುತ್ತೇವೆ ಎಂದು ಬೆದರಿಕೆ ಹಾಕುವ ಲಸಿಕಾ ಭಯೋತ್ಪಾದನೆ ಬಿಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಪಿಐ ರಾಜ್ಯ ಸಹ ಕಾರ್ಯದರ್ಶಿ ಜನಾರ್ಧನ್, ರಾಜ್ಯ ಮಂಡಳಿ ಸದಸ್ಯ ವಿಜಯ್ಕುಮಾರ್, ಜಿಲ್ಲಾ ಕಾರ್ಯದರ್ಶಿ ರೇಣುಕಾರಾಧ್ಯ, ಮುಖಂಡ ಬಿ. ಅಮ್ಜದ್ ಉಪಸ್ಥಿತರಿದ್ದರು.
ಇದನ್ನೂ ಓದಿ:
Discussion about this post