ಚಿಕ್ಕಮಗಳೂರು : ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾಂಜಲಿ ಹೇಳಿದರು.
ನಗರದ ರಾಮನಹಳ್ಳಿಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹುತಾತ್ಮ ಸ್ಮಾರಕ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರನ್ನು ಸ್ಮರಿಸಿ ಪುಷ್ಪಗುಚ್ಛದ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಪೊಲೀಸರ ತ್ಯಾಗ, ಪ್ರಾಮಾಣಿಕ ಸೇವಾ ಮನೋಭಾವ ಶ್ರೇಷ್ಠವಾದುದು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕುಟುಂಬ, ಮಕ್ಕಳೆನ್ನದೇ ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಜನಸಾಮಾನ್ಯರ ಆಸ್ತಿಪಾಸ್ತಿ ಸುಭದ್ರವಾಗಿರಲು ಕಾರಣ ಪೊಲೀಸರು. ಜನಸಾಮಾನ್ಯರು ಅವರನ್ನು ಗೌರವಿಸಿ, ಅಗತ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು
ಪೊಲೀಸರು ಎಂಥ ಕಠಿಣ ಪ್ರಕರಣವನ್ನೂ ಭೇದಿಸುತ್ತಾರೆ. ಸಮಾಜದಲ್ಲಿ ಶಾಂತಿ ನೆಲೆಸಲು ಕಾರಣರಾಗಿರುವ ಪೊಲೀಸರನ್ನು ರಾಷ್ಟಲಾಂಛನದಲ್ಲಿರುವ ಕಣ್ಣಿಗೆ ಕಾಣಿಸದ ನಾಲ್ಕನೇ ಸಿಂಹಕ್ಕೆ ಹೋಲಿಸಲಾಗುತ್ತದೆ. ಶ್ರೇಷ್ಟವಾದ ವೃತ್ತಿಗಳಲ್ಲಿ ಪೊಲೀಸ್ ವೃತ್ತಿ ಕೂಡ ಒಂದು, ಪೊಲೀಸ್ ವ್ಯವಸ್ಥೆ ಇಲ್ಲದ ಸಮಾಜವನ್ನು ಊಹಿಸಲು ಅಸಾಧ್ಯ ಎಂದರು.
ದೇಶಕ್ಕಾಗಿ ಅನೇಕ ಯೋಧರು, ಪೊಲೀಸರು ತಮ್ಮ ಪ್ರಾಣತ್ಯಾಗ ಮಾಡಿದ್ದು ಅವರನ್ನು ಸ್ಮರಿಸುವ ಸಲುವಾಗಿ ಅಕ್ಟೋಬರ್ ೨೧ ನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಸ್ಮರಣೆ ಮಾಡಿದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ ದೇಶದಲ್ಲಿ ಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣ ಸಮರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ. ವಿಪತ್ತು ನಿರ್ವಹಣೆ, ಕೋವಿಡ್ ಸಂದರ್ಭ, ಭಯಾನಕ ಅಪರಾಧ, ಆಂತರಿಕ ಭದ್ರತೆ ಕಾಪಾಡುವಲ್ಲಿ ಪೊಲೀಸರ ನಿರಂತರ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.
ಕೋವಿಡ್ ಸಂದರ್ಭದ ಕರ್ತವ್ಯ ಪಾಲನೆ ವೇಳೆ ರಾಜ್ಯದಲಿ ೪೧ ಮಂದಿ ಪೊಲೀಸರು ಮರಣಹೊಂದಿದ್ದಾರೆ. ಜಿಲ್ಲೆಯಲ್ಲಿ ಶಕುಂತಲಾ ಎಂಬುವವರು ಸಾವನ್ನಪಿರುವ ಬಗ್ಗೆ ಸ್ಮರಿಸಿದರು.
ಕರ್ತವ್ಯ ನಿಷ್ಠೆ ಮೂಲಕ ದೇಶಸೇವೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳನ್ನು ಸ್ಮರಿಸುವ ಸುದಿನವಾಗಿದೆ. ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಆಯುಷ್ಯ, ಆರೋಗ್ಯ ನೀಡಲೆಂದು ಆಶಿಸಿದ ಅವರು. ಹುತಾತ್ಮರ ಕುಟುಂಬ ಅಥವಾ ಪೊಲೀಸ್ ಸಿಬ್ಬಂದಿಗಳು ಸಮಸ್ಯೆಗಳನ್ನು ಜಿಲ್ಲಾಡಳಿತದೊಂದಿಗೆ ಮುಕ್ತವಾಗಿ ಹಂಚಿ ಕೊಂಡಲ್ಲಿ, ಸ್ಪಂದಿಸಿ ಪರಿಹರಿಸುವುದಾಗಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್ ಮಾತನಾಡಿ ಪೊಲೀಸ್ ಹುತಾತ್ಮರ ದಿನ ಸರ್ವೋತ್ತಮ ತ್ಯಾಗ ಬಲಿದಾನದ ಹೆಮ್ಮೆಯ ದಿನ. ಮತ್ತೊಂದೆಡೆ ಭಾವನಾತ್ಮಕ ದಿನವೂ ಹೌದು, ಲಡಾಕ್ ಗಡಿಯಲ್ಲಿ ೧೯೫೯ರಲ್ಲಿ ಹುತಾತ್ಮರಾದ ಪೊಲೀಸರು ಹಾಗೂ ದೇಶದ ವಿವಿಧೆಡೆ ಕರ್ತವ್ಯ ನಿರತ ಪೊಲೀಸರು ದೇಶಕ್ಕಾಗಿ ಪ್ರಾಣತೆತ್ತ ನೆನಪಿಗಾಗಿ ಪ್ರತಿ ವರ್ಷ ಅಕ್ಟೋಬರ್ ೨೧ ರಂದು ಪೊಲೀಸ್ ಹುತಾತ್ಮ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ ಎಂದರು.
ದೇಶ ರಕ್ಷಕರು ತಮ್ಮ ಕರ್ತವ್ಯದಲ್ಲಿ ತೊಡಗಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆ, ನಾಗರಿಕ ಆಸ್ತಿ, ಪಾಸ್ತಿ ರಕ್ಷಣೆ, ಅಪರಾಧ ತಡೆ ಮತ್ತು ಹಲವು ಕರ್ತವ್ಯ ಪಾಲನೆಗಳಲ್ಲಿ ಸದಾ ನಿರತರಾಗಿ ಸಮಾಜದ ಸುರಕ್ಷತೆಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆನಪು ಮಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.
ದೇಶದಲ್ಲಿ ಈ ವರ್ಷ ೩೭೭ ಪೊಲೀಸರು ಕರ್ತವ್ಯ ಸೇವೆಯ ವೇಳೆ ಮರಣ ಹೊಂದಿದ್ದು, ರಾಜ್ಯದ ೧೬ ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. ದೇಶರಕ್ಷಣೆ ಜೊತೆಗೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಒತ್ತಡದ ನಡುವೆಯೂ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ಕರ್ತವ್ಯ, ಪ್ರಕೃತಿ ವಿಕೋಪ, ಉಗ್ರರ ದಾಳಿ, ಗಣ್ಯರಿಗೆ ಬಂದೋಬಸ್ತ್ ಸೇರಿದಂತೆ ಸಮಾಜದ ಸುವ್ಯವಸ್ಥೆಗೆ ಶ್ರಮಿಸುತ್ತಿದ್ದಾರೆ ಅವರ ಸೇವೆಗೆ ಸಾರ್ವಜನಿಕರು ಸಹಕರಿಸಬೇಕಿದೆ ಎಂದು ಕೇಳಿಕೊಂಡರು.
ಪೊಲೀಸ್ ಹುತಾತ್ಮರ ಗೌರವ ಸೂಚಕವಾಗಿ ಪರೇಡ್ ಕಮಾಂಡರ್ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ನಂತರ ಮೌನಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸುನೀಲ್ ಪನ್ವಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ, ಹಿರಿಯ ಸಿವಿಲ್ ನ್ಯಾಯಾಧೀಶ ಸೋಮ, ಸೇರಿದಂತೆ ಮತ್ತಿತರರು ಇದ್ದರು
e-paper: e Paper – October 21, 2021

























Discussion about this post