ವಿಜಯಪುರ: ಸಿಂದಗಿ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಚುನಾವಣೆಯಲ್ಲಿ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಜಿಲ್ಲೆಯ ಸಿಂದಗಿ ಉಪ ಚುನಾವಣೆ ಹಿನ್ನೆಲೆ ಕೊಕಟನೂರ, ಕನ್ನೊಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ನಡೆಸಿ ಅವರು ಮಾತನಾಡಿ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಹೋಗಿ ಹೆಣ್ಣು ಮಕ್ಕಳಿಗೆ ಅರಿಷಿನ, ಕುಂಕುಮ ನೀಡಿ ಮತ ಯಾಚನೆ ಮಾಡುತ್ತಿದ್ದೇವೆ. ನಾವು ಮನೆ ಮನೆಗೆ ಭೇಟಿ ನೀಡಿದಾಗ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ತಲುಪಿರುವುದು ಜನರಿಂದ ಮಾಹಿತಿ ಲಭ್ಯವಾಗುತ್ತಿದೆ. ಹೀಗಾಗಿ ಜನರಿಂದ ಒಳ್ಳೆಯ ಸ್ಪಂದನೆ ದೊರೆಯುತ್ತಿದೆ ಎಂದು ಹೇಳಿದರು.
ನಾವೆಲ್ಲರೂ ಕ್ಷೇತ್ರದಲ್ಲಿ ಸಕ್ರೀಯರಾಗಿ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸಿಂದಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಎಲ್ಲ ಸಚಿವರು ಜವಾಬ್ದಾರಿಗಳನ್ನು ಹಂಚಿಕೊಂಡು ಕೆಲಸ ಮಾಡುತ್ತಿದ್ದೇವೆ. ಬೂತ್ ಮಟ್ಟದ ಕಾರ್ಯಕರ್ತರು, ಪೇಜ್ ಪ್ರಮುಖರು ಎಲ್ಲರೂ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇದಕ್ಕೂ ಮುನ್ನ ಸಿಂದಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಕಟನೂರು ಹಾಗೂ ಕನ್ನೊಳ್ಳಿ ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಪ್ರಭಾವಿ ಮುಖಂಡರ ಮನೆಗಳಿಗೆ ತೆರಳಿ, ಸ್ಥಳೀಯ ಸಮಸ್ಯೆಗಳು, ಸ್ಥಳೀಯ ನಾಯಕರ ನಡುವಿನ ಭಿನ್ನಾಭಿಪ್ರಾಯದಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಸ್ಥಳೀಯ ನಾಯಕರ ಮನೆಗಳಿಗೆ ತೆರಳಿ ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಪರ ಹೆಚ್ಚಿನ ಮತದಾರರನ್ನು ಸೆಳೆದು ಮತದಾನ ಮಾಡಿಸುವ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.
ಸ್ಥಳೀಯವಾಗಿ ಇರುವ ಗೊಂದಲಗಳನ್ನು ಬದಿಗಿಟ್ಟು, ದೇಶ ಹಾಗೂ ರಾಜ್ಯದ ಹಿತ ದೃಷ್ಟಿ ಹಾಗೂ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಹೆಚ್ಚಿನ ಮತದಾರರನ್ನು ಸೆಳೆಯುವಂತೆ ಕೋರಿದರು.

























Discussion about this post