ಚಿಕ್ಕಮಗಳೂರು: ರಾಜ್ಯದ ಗಡಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರನ್ನು ಎತ್ತಿಕಟ್ಟಿ ದ್ವೇಷದ ವಾತಾವರಣ ಮೂಡಿಸಿ ಅಶಾಂತಿಗೆ ಯತ್ನಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಮಗಳೂರು ಘಟಕದ ಕಾರ್ಯಕರ್ತರು ನಗರದ ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನೂರಾರು ಕರವೇ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಿಂದ ಸಾಗಿ ಎಂಇಎಸ್ ಹಾಗೂ ಶಿವಸೇನೆ ವಿರುದ್ದ ಧಿಕ್ಕಾರದ ಘೋಷಣೆ ಕೂಗುತ್ತಾ ತಾಲ್ಲೂಕು ಕಛೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ ಭಾಷಾವಾರು ಪ್ರಾಂತ್ಯ ವಿಂಗಡಣೆಯ ಬಳಿಕ ಮಹಾರಾಷ್ಟ್ರ ರಾಜಕಾರಣಿಗಳು ಅಲ್ಲಿನ ಸರ್ಕಾರಗಳ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಪದೇ ಪದೇ ಅಶಾಂತಿಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ರಾಜಕೀಯ ಸಂಘಟನೆಯನ್ನು ಹುಟ್ಟುಹಾಕಿ ಬೆಳಗಾವಿ ಕನ್ನಡಿಗರ ಮೇಲೆ ಮರಾಠಿಗನ್ನು ಎತ್ತಿಕಟ್ಟುವ ಮೂಲಕ ದ್ವೇಷದೊಂದಿಗೆ ಅಶಾಂತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು.
ಇತ್ತೀಚಿಗೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಅಪಮಾನ ಮಾಡುವುದಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸೇನಾನಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಭಗ್ನಗೊಳಿಸಿ ಕೋಮುದ್ವೇಷ ಉಂಟಾಗುವಂತೆ ಮಾಡಿರುವುದು ಖಂಡನೀಯ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ನಾರಾಯಣಗೌಡ ಬಣದ ಕರವೇ ಎಂಇಎಸ್ ಹಾಗೂ ಶಿವಸೇನೆ ನಿಷೇಧಕ್ಕೆ ಕರೆ ನೀಡಿದ್ದು ಅದರಂತೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಏಕಕಾಲದಲ್ಲಿ ಪ್ರತಿಭಟನೆ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.
ಕರ್ನಾಟಕ ಸರ್ಕಾರದ ವಿರುದ್ದ ಮಾನಹಾನಿಕರ ಪ್ರಚೋಧನಾತ್ಮಕ ಭಾಷಣಗಳನ್ನು ಮಾಡುವುದು, ಮುಗ್ದ ಮರಾಠಿಗರನ್ನು ಕನ್ನಡಿಗರ ವಿರುದ್ದ ಎತ್ತಿ ಕಟ್ಟುವುದು ನಿರಂತರವಾಗಿ ನಡೆಯುತ್ತಲೇ ಇದೆ. ಇದರ ಪರಿಣಾಮದಿಂದ ಬೆಳಗಾವಿಯಲ್ಲಿನ ಕನ್ನಡಿಗರು, ಮರಾಠಿಗರು ನೆಮ್ಮದಿ, ಶಾಂತಿಯಿಂದ ಬಾಳಲು ಸಾಧ್ಯವಾಗುತ್ತಿಲ್ಲ. ಅವರು ಈಗಾಗಲೇ ಎಂಇಎಸ್ ಹಾಗೂ ಶಿವಸೇನೆಗಳನ್ನು ತಿರಸ್ಕರಿಸಿದ್ದು, ಹತಾಶೆಗೆ ಒಳಗಾದ ಈ ಸಂಘಟನೆಗಳು ಹಿಂಸಾಚಾರಕ್ಕೆ ಮುಂದಾಗಿವೆ ಎಂದು ವಾಗ್ದಾಳಿ ನಡೆಸಿದರು.
ಮಾನವತವಾದಿ ಬಸವಣ್ಣನವರ ಭಾಚಿತ್ರಕ್ಕೆ ಮಸಿಬಳಿಯುವುದು, ಪ್ರತಿಮೆ ಭಗ್ನಗೊಳಿಸುವುದು, ಇಡೀ ಮಾನವ ಕುಲಕ್ಕೆ ಮಾಡಿದ ಅಪಮಾನವಾಗಿದೆ. ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿನ ಕನ್ನಡಿಗರ ಆತ್ಮಾಭಿಮಾನದ ಸಂಕೇತವಾಗಿರುವ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಕರ್ನಾಟಕ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಅಪಾರ ನಷ್ಟ ಉಂಟು ಮಾಡಿದೆ, ಇಂತಹ ಭಯೋತ್ಪಾದಕಯನ್ನು ಹೊಂದಿರುವ ಸಂಘಟನೆಗಳನ್ನು ಸರ್ಕಾರ ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಕನ್ನಡಿಗರು ಹಾಗೂ ಮರಾಠಿಗರ ನಡುವೆ ಕೋಮುದ್ವೇಷ ಹೆಚ್ಚುವಂತೆ ಮಾಡಿ, ಹಿಂಸಾಚಾರಕ್ಕೆ ಪ್ರಚೋಧನೆ ನೀಡುತ್ತಿದ್ದು, ನಾಡದ್ರೋಹಿ, ಹಾಗೂ ದೇಶದ್ರೋಹಿ ಕೃತ್ಯಗಳಲ್ಲಿ ಭಾಗಿಯಾಗಿರುವ ಎಂಇಎಸ್ ಮತ್ತು ಶಿವಸೇನೆಯ ವಿರುದ್ಧವಾಗಿ ಸರ್ಕಾರ ಎಲ್ಲಾ ರೀತಿಯ ಕಾನೂನು ರಾಜಕೀಯ ಪ್ರಕ್ರಿಯೆಗಳನ್ನು ಆರಂಭಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಸಮಾಜ ಘಾತುಕ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ದಶರಥರಾಜ್ ಅರಸ್, ಕಾರ್ಯದರ್ಶಿ ಪಂಚಾಕ್ಷರಿ, ಹಾಲೇಶ್, ಓಂಕಾರಸ್ವಾಮಿ, ಯುವಘಟಕದ ಜಿಲ್ಲಾಧ್ಯಕ್ಷ ಕುಮಾರ್ಆರ್.ಶೆಟ್ಟಿ, ಮಧುಸೂದನ್ ಸೇರಿದಂತೆ ಮತ್ತಿತರರು ಇದ್ದರು.
Taluk office besieged by Karave
Discussion about this post