ಲಖನೌ : ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ರೈತರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಡರಾತ್ರಿ ಘಟನಾ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಂಧಿಸಲಾಗಿದೆ. ಈ ಕುರಿತು ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟರ್ನಲ್ಲಿ ಟ್ವೀಟ್ ಮಾಡಿದೆ.
ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಪ್ರಿಯಾಂಕಾ ಗಾಂಧಿ ನಡುವೆ ನಡೆದಿರುವ ಮಾತಿನ ಚಕಮಕಿಯ ವಿಡಿಯೋವನ್ನು ಕಾಂಗ್ರೆಸ್ ಪೋಸ್ಟ್ ಮಾಡಿದೆ. ನೀವು ಸರ್ಕಾರವನ್ನು ರಕ್ಷಿಸುತ್ತಿದ್ದೀರಿ. ನೀವು ನನಗೆ ಕಾನೂನು ವಾರಂಟ್, ಕಾನೂನು ಆಧಾರವನ್ನು ನೀಡಿ, ಇಲ್ಲದಿದ್ದರೆ ನಾನು ಇಲ್ಲಿಂದ ಕದಲುವುದಿಲ್ಲ. ನೀವು ನನ್ನನ್ನು ಬಂಧಿಸಿ ಕಾರಿನಲ್ಲಿ ಕೂರಿಸಿದರೆ ನಾನು ನಿಮ್ಮ ಮೇಲೆ ಅಪಹರಣದ ಆರೋಪ ಹೊರಿಸುತ್ತೇನೆ ಮತ್ತು ಆರೋಪವು ಪೊಲೀಸರ ಮೇಲೆ ಆಗುವುದಿಲ್ಲ, ಆದರೆ ನಿಮ್ಮ ಮೇಲೆ ಮಾಡುತ್ತೇನೆ’ ಎಂದು ಪ್ರಿಯಾಂಕಾ ಪೋಲೀಸ್ ಅಧಿಕಾರಿಯೊಬ್ಬರಿಗೆ ಹೇಳಿದ್ದಾರೆ.
ಕೇಂದ್ರ ಸಚಿವ ಮಿಶ್ರಾ ಅವರು, ಇತ್ತೀಚಿಗಷ್ಟೇ ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಕುರಿತು ಪ್ರಸ್ತಾಪಿಸಿ, ಇದು 10-15 ಜನರು ನಡೆಸುತ್ತಿರುವ ಪ್ರತಿಭಟನೆಯಾಗಿದ್ದು, ಅವರನ್ನು ಸರಿದಾರಿಗೆ ತರಲು ನಮಗೆ ಕೇವಲ 2 ನಿಮಿಷ ಸಾಕು ಎಂದು ಹೇಳಿದ್ದರು, ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು. ಇದರಿಂದ ರೊಚ್ಚಿಗೆದ್ದ ರೈತರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಇದೇ ವೇಳೆ ಈ ಘರ್ಷಣೆ ನಡೆದಿದ್ದು, ಸದರಿ ಘಟನೆಯ ಸತ್ಯಾಂಶವನ್ನು ತನಿಖೆ ಮೂಲಕ ಹೊರಗೆಳೆಯಬೇಕು.
Discussion about this post