ಚಿಕ್ಕಮಗಳೂರು : ದೇಶದ ಪ್ರತಿಯೊಬ್ಬರಿಗೂ ಸಮಪಾಲು ಮತ್ತು ಸಮಬಾಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನವನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಒತ್ತಾಯಿಸಿದರು.
ನಗರದ ಬಿಎಸ್ಪಿ ಕಛೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಅಂಬೇಡ್ಕರ್ ಅವರು ೨ ವರ್ಷ ೧೧ ತಿಂಗಳು ೧೮ ದಿನಗಳಷ್ಟು ಸುಧೀರ್ಘ ಕಾಲ ಶ್ರಮಪಟ್ಟು ದೇಶದ ಒಳಿತಿಗಾಗಿ ರಚಿಸಿರುವ ಸಂವಿಧಾನವನ್ನು ಸ್ವಾತಂತ್ರ್ಯ ಬಂದು ೭ ದಶಕಗಳಾದರೂ ಸಂಪೂರ್ಣವಾಗಿ ಜಾರಿಗೊಳಿಸಿಲ್ಲ. ಇದರಿಂದಾಗಿ ದೇಶದಲ್ಲಿಂದು ಸಂವಿಧಾನದ ಬುನಾದಿ, ಪ್ರಜಾಪ್ರಭುತ್ವದ ವ್ಯವಸ್ಥೆ ಕುಸಿದಿದೆ ಎಂದರು.
ರಾಷ್ಟ್ರದಲ್ಲಿ ಸಂವಿಧಾನ ಬಾಹಿರ ಚಟುವಟಿಕೆಗಳು ನಡೆಯುತ್ತಿವೆ, ಕೆಳವರ್ಗದವರು, ದಲಿತರು, ಶೋಷಿತರು, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಿರಂತರವಾಗಿದೆ, ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿದೆ ಎಂದು ವಿಷಾದಿಸಿದರು.
ಸರ್ವರಿಗೂ ಸಮಪಾಲು- ಸಮಬಾಳು ನೀಡುವುದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಆಶಯವಾಗಿತ್ತು ಆದರೆ ಇಂದು ಅದು ಮರೀಚಿಕೆಯಾಗಿಯೇ ಉಳಿದಿದೆ ಸಂವಿಧಾನವನ್ನು ಇಡಿಯಾಗಿ ಜಾರಿಗೊಳಿಸಿದರೆ ಮಾತ್ರ ಅಂಬೇಡ್ಕರ್ ಅವರ ಸರ್ವರಿಗೂ ಸಮಪಾಲು-ಸಮಬಾಳು ನೀಡುವ ಕನಸು ನನಸಾಗುತ್ತದೆ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಸಮರ್ಪಿಸಿದ ದಿನದ ಸ್ಮರಣೆಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ ದೇಶದ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಅಸ್ತಿಗಳನ್ನೂ ಖಾಸಗಿಯವರಿಗೆ ಮಾರುತ್ತಿರುವ ಬಿಜೆಪಿ ಇನ್ನೂ ಅಧಿಕಾರದಲ್ಲಿ ಮುಂದುವರೆದರೆ ರಾಷ್ಟçದ ಜನ ಮತ್ತೆ ಗುಲಾಮಗಿರಿಯಲ್ಲಿ ಬದುಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂವಿಧಾನವನ್ನು ಉಳಿಸುವ ಕುರಿತು ಸಮಾರಂಭದಲ್ಲಿ ಕಾರ್ಯಕರ್ತರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಪಕ್ಷದ ಮುಖಂಡರಾದ ಕೆ.ಎಸ್.ಮಂಜುಳಾ, ಶೋಭಾ, ಧನಂಜಯ, ರವಿಕುಮಾರ್, ಹೊನ್ನಪ್ಪ, ಸೋಮಶೇಖರ್, ಲೋಕೇಶ್, ಹನುಮಂತರಾಯ, ವಸಂತ, ನವೀನ್ ಉಪಸ್ಥಿತರಿದ್ದರು.
ಇದನ್ನೂ ಓದಿ:
ಹಲವು ಗಣ್ಯರಿಂದ ಸಂವಿಧಾನ ದಿನದ ಸ್ಮರಣೆ; ಇಲ್ಲಿದೆ ಸಂಕ್ಷಿಪ್ತ ಮಾಹಿತಿ
Discussion about this post